ಬೆಂಗಳೂರು: ಮೈಸೂರಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೊಟೀಸ್ ನೀಡಿದ್ದು, ಈ ಕುರಿತು ಸಿದ್ದರಾಮಯ್ಯ ಅವರು ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ತರಾತುರಿಯಲ್ಲಿ ರಾಜಕೀಯ ಮತ್ತು ಕಾನೂನು ಹೋರಾಟ ನಡೆಸುವ ಕುರಿತು ಸಿದ್ದರಾಮಯ್ಯ ಉಪಾಹಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಇಂದಿನ ಸಭೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಶಾಸಕರೂ ಆಗಿರುವ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೂ ಮುಖ್ಯಮಂತ್ರಿ ಆಹ್ವಾನ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಮುಡಾ ವಿಚಾರದಲ್ಲಿನ ಬೆಳವಣಿಗೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.
ರಾಜ್ಯಪಾಲರು ಮುಡಾ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ನೋಟಿಸ್ ನೀಡಿದ್ದಾರೆ. ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಈಗಾಗಲೇ ರಾಜ್ಯಪಾಲರಿಗೆ ನೀಡಲಾಗಿದೆ. ಆದರೂ ದುರುದ್ದೇಶಪೂರ್ವಕವಾಗಿ ಅವರು ನೋಟಿಸ್ ನೀಡಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯ ಮಾತಿಗೆ ಸಚಿವರು ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.
ಬೇರೆ ರಾಜ್ಯಗಳಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜಭವನ ದುರ್ಬಳಕೆ ಆಗಿದೆ. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಈ ಯತ್ನವನ್ನು ವಿಫಲಗೊಳಿಸಲು ರಾಜಕೀಯವಾಗಿ ಜೊತೆಗೆ ಕಾನೂನಾತ್ಮಕವಾಗಿ ತೀವ್ರ ಹೋರಾಟ ನಡೆಸುವ ಕುರಿತು ಕಾಂಗ್ರೆಸ್ ಒಳಗೊಳಗೆ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಬೆಂಬಲಿಸಿದ ರಾಹುಲ್:
ಹೈಕಮಾಂಡ್ ತಮ್ಮ ಬೆನ್ನಿಗೆ ನಿಲ್ಲಲಿದೆ ಎಂಬ ಬಲವಾದ ವಿಶ್ವಾಸದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದೂ ಗೊತ್ತಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದ ಬಗ್ಗೆ ಹೈಕಮಾಂಡ್ ನಾಯಕರಿಗೆ ಮುಖ್ಯಮಂತ್ರಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಾನು ಯಾವುದೇ ರೀತಿಯಲ್ಲೂ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿ ಬಂದಿದ್ದಾರೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.