Friday, June 20, 2025

ಸತ್ಯ | ನ್ಯಾಯ |ಧರ್ಮ

ಕಾದಂಬರಿ ದಿಗ್ಗಜ, ಶಿಕ್ಷಣ ತಜ್ಞ ಕೆಟಿ ಗಟ್ಟಿ ನಿರ್ಗಮನ

ಮಂಗಳೂರು: ಶಿಕ್ಷಣ ತಜ್ಞ, ಕಾದಂಬರಿ ಲೋಕದ ದಿಗ್ಗಜ, ಭಾಷಾ ತಜ್ಞ ಕೆಟಿ ಗಟ್ಟಿ ಎಂದೇ ಖ್ಯಾತರಾಗಿರುವ ಕೂಡ್ಲು ತಿಮ್ಮಪ್ಪ ಗಟ್ಟಿಯವರು ಇಂದು (ಫೆಬ್ರವರಿ 19, ಸೋಮವಾರ) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತ್ನಿ, ನಿವೃತ್ತ ಶಿಕ್ಷಕಿ ಯಶೋದಾ, ಪುತ್ರ ನಿಟ್ಟೆ ವಿವಿಯ ಭೌತಶಾಸ್ತ್ರ ಪ್ರಾಧ್ಯಾಪಕ ಸತ್ಯಜಿತ್, ಪುತ್ರಿಯರಾದ ಅಮೆರಿಕದ ಪರಿಸರ ವಿಜ್ಞಾನಿ ಪ್ರಿಯದರ್ಶಿನಿ, ಆಸ್ಟ್ರಿಯಾದಲ್ಲಿ ಮಾನವಶಾಸ್ತ್ರಜ್ಞೆಯಾಗಿರುವ ಆಗಿರುವ ಚಿತ್ ಪ್ರಭಾರನ್ನು ಅಗಲಿದ್ದಾರೆ.

ವಿದ್ಯಾರ್ಥಿಪ್ರಿಯ ಪ್ರಾಧ್ಯಾಪಕರೆನಿಸಿದ ಕೆಟಿ ಗಟ್ಟಿಯವರು 1938 ಜುಲೈ ೨೨ ರಂದು ಕಾಸರಗೋಡು ಸಮೀಪದ ಕೂಡ್ಲುವಿನಲ್ಲಿ ಜನಿಸಿದರು. ತಂದೆ ಧೂಮಪ್ಪ ಗಟ್ಟಿಯವರು ಕೃಷಿಕರೂ, ಯಕ್ಷಗಾನದ ಅಭಿಮಾನಿಗಳೂ ಕೂಡ. ಇವರ ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಹಾಡಬಲ್ಲವರಾಗಿದ್ದರು. 

ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಎಂಟನೆಯ ತರಗತಿಯವರೆಗೆ ಕಲಿತು, ಎಸ್‌.ಎಸ್‌.ಎಲ್‌.ಸಿ.ಯಲ್ಲಿ ಉತ್ತೀರ್ಣರಾದ ನಂತರ ಕಾಸರಗೋಡಿನ ಚಳುವಳಿಯಲ್ಲಿ ಬಾಗಿಯಾದರು. ನಂತರ ಪಿಯು ಹಾಗೂ ಬಿಎ ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದರು. ಮಾಯಿಪ್ಪಾಡಿಯ ಸರಕಾರಿ ಬೇಸಿಕ್‌ ಟ್ರೈನಿಂಗ್‌ ಶಾಲೆಯಲ್ಲಿ ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದರು. ತಲಚೇರಿಯ ಸರಕಾರಿ ಟ್ರೈನಿಂಗ್‌ ಕಾಲೇಜಿನಿಂದ ಒಂದು ವರ್ಷದ ಬಿಎಡ್‌ ಪದವಿ ಪಡೆದು, ಕಾಸರಗೋಡಿದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ತಮ್ಮ ವೃತ್ತಿಯನ್ನು ಆರಂಭಿಸಿದರು.

ಖಾಸಗಿಯಾಗಿ ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದ ಗಟ್ಟಿಯವರು, 1968ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆಯಲ್ಲಿ ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರು. ನಂತರ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ನಿಯುಕ್ತರಾಗಿ ಇಥಿಯೋಪಿಯಾದಲ್ಲಿರುವಾಗಲೇ ಲಂಡನ್ನಿನ ಟ್ರಿನಿಟಿ ಕಾಲೇಜಿನಿಂದ ಇಂಗ್ಲಿಷ್‌ ಕಲಿಕೆಯಲ್ಲಿ ಡಿಪ್ಲೊಮ ಮತ್ತು ಆಕ್ಸ್‌ಫರ್ಡಿನ ಕಾಲೇಜ್‌ ಆಫ್‌ ಪ್ರಿಸೆಪ್ಟರ್ಸ್‌ನಿಂದ ಪಡೆದ ಡಿಪ್ಲೊಮ ಪಡೆದರು.

1957ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ಹತ್ತವರೇ ಪ್ರೇರಣೆಯಾದರು. ಯಕ್ಷಗಾನ ಪ್ರಿಯರಾದ ತಂದೆ ಧೂಮಪ್ಪನವರು ಕೂಡ್ಲು ಯಕ್ಷಗಾನ ನಾಟಕ ಮಂಡಲಿ (ಮಂಗಳೂರು)ಯೊಡನೆ ಊರೂರು ಸುತ್ತುತ್ತಾ, ಮನೆಗೆ ತರುತ್ತಿದ್ದ ಪುಸ್ತಕಗಳನ್ನು ಕೆಟಿ ಗಟ್ಟಿಯವರು ಓದುತ್ತಿದ್ದರು.

ಇವರ ಮೊದಲ ಕಾದಂಬರಿ ‘ಶಬ್ದಗಳು’ ಧಾರಾವಾಹಿಯಾಗಿ ಸುಧಾವಾರ ಪತ್ರಿಕೆಯಲ್ಲಿ 1976ರಲ್ಲಿ ಪ್ರಕಟವಾಯಿತು. ಇದು ಸುಧಾ ವಾರಪತ್ರಿಕೆಯ ಸರ್ಕ್ಯುಲೇಷನ್‌ ಹೆಚ್ಚು ಮಾಡಿತ್ತು. ನಾಲ್ಕು ಮುದ್ರಣಗಳನ್ನೂ ಕಂಡಿತು.

1978ರಲ್ಲಿ ಗಟ್ಟಿಯವರು ಬರೆದ ‘ಸಾಫಲ್ಯ’ ಕಾದಂಬರಿಯೂ ಸೇರಿ 2004ರ ವರೆಗೆ ಸುಮಾರು 14 ಕಾದಂಬರಿಗಳು ಸುಧಾ ವಾರಪತ್ರಿಕೆಯೊಂದರಲ್ಲಿಯೇ ಧಾರಾವಾಹಿಯಾಗಿ ಪ್ರಕಟಗೊಂಡಿವೆ. ಒಂದೇ ಪತ್ರಿಕೆಯಲ್ಲಿ ಇಷ್ಟು ಕಾದಂಬರಿಗಳನ್ನು ಪ್ರಕಟಿಸಿದ್ದು ಲೇಖಕನಾಗಿ ಕೆಟಿ ಗಟ್ಟಿಯವರ ಸಾಧನೆ.

ಇದಲ್ಲದೆ ತುಷಾರ ಮಾಸ ಪತ್ರಿಕೆಯಲ್ಲಿ ‘ಮನೆ’, ಕಾಮಯಜ್ಞ ಕಾದಂಬರಿಗಳು, ಗೆಳತಿ ಪತ್ರಿಕೆಯಲ್ಲಿ ‘ಪೂಜಾರಿ’, ಕಾದಂಬರಿ ಪತ್ರಿಕೆಯಲ್ಲಿ ‘ಅವಿಭಕ್ತರು’, ತರಂಗ ವಾರ ಪತ್ರಿಕೆಯಲ್ಲಿ ‘ನಿರಂತರ’, ಮಲ್ಲಿಗೆ ಮಾಸಪತ್ರಿಕೆಯಲ್ಲಿ ‘ನವಂಬರ್ 10’, ಕರ್ಮವೀರ ವಾರಪತ್ರಿಕೆಯಲ್ಲಿ ‘ಸನ್ನಿವೇಶ’, ಪ್ರಜಾವಾಣಿ ದಿನಪತ್ರಿಕೆಯಲ್ಲಿ ‘ಕಾರ್ಮುಗಿಲು’, ಮಂಗಳ ವಾರಪತ್ರಿಕೆಯಲ್ಲಿ ‘ರಸಾತಳ’ ಮುಂತಾದವುಗಳು ವಿವಿಧ ಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿದ್ದೂ ಸೇರಿ ಬರೆದ ಕಾದಂಬರಿಗಳು ಸುಮಾರು 46.

ಇಥಿಯೋಪಿಯಾದಲ್ಲಿದ್ದಾಗ ಒಮ್ಮೆ ನಡೆದ ಘಟನೆ ಇವರ ಮನಸ್ಸಿನ ಮೇಲೆ ಅಚ್ಚೊತ್ತಿತು. ಇವರು ಪ್ರೀತಿಯಿಂದ ಬೆಳೆಸಿದ ನಿಂಬೆಗಿಡವನ್ನೂ ಕುರಿಯೊಂದು ಬಂದು ತಿನ್ನತೊಡಗಿದಾಗ ಕೋಪಗೊಂಡು ಓಡಿಸಿದ ಮೇಲೆ ಗಟ್ಟಿಯವರೆಗೆ ಕಾಡಿದ ಪ್ರಶ್ನೆ: ಬೇರೆಯವರ ದೇಶ, ಅವರ ಮಣ್ಣು, ಅವರ ಗಿಡ, ಅವರ ಕುರಿ-ನಾನು ಓಡಿಸಿದ್ದು ಸರಿಯಾ? ಅನುಭವಿಸಿದ ಈ ಪ್ರಶ್ನೆಗೆ ಉತ್ತರವಾಗಿ ಬಂದದ್ದೇ ‘ಅರಗಿನ ಅರಮನೆ’ ಕಾದಂಬರಿ.

ಭಾರತಕ್ಕೆ ಮರಳಿ ಬಂದ ಗಟ್ಟಿಯವರು ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ, ದ.ಕ. ಜಿಲ್ಲೆಯ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡರು. ‘ಮನುಷ್ಯನ ವಾಸನೆ ಮತ್ತು ಇತರ ಕಥೆಗಳು’, ‘ನೀಲಿ ಗುಲಾಬಿ ಮತ್ತು ಇತರ ಕಥೆಗಳು’, ‘ಭೂಗತ ಮತ್ತು ಇತರ ಕಥೆಗಳು’,‘ವಿಶ್ವ ಸುಂದರಿ ಮತ್ತು ಇತರ ಕಥೆಗಳು’ ಹಾಗೂ ‘ಪ್ರೀತಿ ಎಂಬ ಮಾಯೆ ಮತ್ತು ಇತರ ಕಥೆಗಳು’ ಎಂಬ ಸಂಕಲನಗಳನ್ನು ಪ್ರಕಟಿಸಿದರು.

ಶಿಕ್ಷಣ, ಸಾಹಿತ್ಯ, ಸಾಮಾಜಿಕ ವಿಚಾರಗಳಿಗೆ ಸಂಬಂಧಿಸಿದ ಅನೇಕ ಲೇಖನಗಳನ್ನು ಇವರು ಪ್ರಕಟಿಸಿದ್ದಾರೆ. ‘ಮೂರನೆಯ ಧ್ವನಿ’ (ಸಾಹಿತ್ಯ ಚಿಂತನ), ‘ನಿನ್ನೆ ನಾಳೆಗಳ ನಡುವೆ’ (ಸಾಮಾಜಿಕ ಚಿಂತನ), ‘ನಮ್ಮ ಬದುಕಿನ ಪುಟಗಳು’, ನಮ್ಮೊಳಗಿನ ಆಕಾಶ, ನಾಲ್ಕುದಿಕ್ಕು ಮತ್ತು ಅಂತರಾಳದ ತಂತಿ (ವೈಚಾರಿಕ ಲೇಖನಗಳ ಕೃತಿಗಳು) ಪ್ರಕಟಗೊಂಡಿವೆ. ‘ಝೇಂಕಾರದ ಹಕ್ಕಿ’ ಎಂಬ ಇವರ ಕವನ ಸಂಕಲನ 1994 ರಲ್ಲಿ, 2001ರಲ್ಲಿ ಇಂಗ್ಲಿಷ್‌ ಗೀತೆಗಳ ಅನುವಾದ ‘ನನ್ನ ಪ್ರೇಮದ ಹುಡುಗಿ’ ಪ್ರಕಟವಾಗಿದೆ.

ರಂಗಭೂಮಿಯ ಬಗ್ಗೆ ವಿಶೇಷ ಒಲವಿದ್ದ ಗಟ್ಟಿಯವರು ನಾಟ್ಕ, ಕೆಂಪುಕಾಗೆ, ಸತ್ಯಕ್ಕೆ ಜಯ, ಕುರುಡರು, ನಗರ ಪರ್ವ, ಬೊಂಬೆಯಾಟ, ಜುಜುಬಿದೇವರ ಜುಗಾರಿ ಸೇರಿದಂತೆ 18 ನಾಟಕ ಕೃತಿಗಳನ್ನು ರಚಿಸಿದ್ದಾರೆ. ಇವುಗಳಲ್ಲಿ ಕೆಲವು ಆಕಾಶವಾಣಿಯಲ್ಲೂ ರೇಡಿಯೋ ನಾಟಕಗಳಾಗಿ ಪ್ರಸಾರವಾಗಿವೆ. ಪ್ರೌಢರಿಗಷ್ಟೇ ಅಲ್ಲದೆ ಮಕ್ಕಳಿಗಾಗಿಯೂ 30 ನಾಟಕಗಳನ್ನು ರಚಿಸಿದ್ದು ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಪಂಜಾಬಿ ಮುಂತಾದ ಭಾಷೆಗಳಿಗೂ ಅನುವಾದಗೊಂಡಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page