ಹನೂರು : ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, ಕುಮಾರ್ ಮೃತಪಟ್ಟಿದ್ದು ಮಹಿಮದಾಸ್ ಮೈಸೂರಿನ ನಾರಾಯಣ ಹೃದಯಲಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನಜಾವ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂರು ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಉದ್ರಿಕ್ತರಿಂದ ಪೀಠೋಪಕರಣ ಧ್ವಂಸ: ಇನ್ನು ಮೂವರು ಮೃತಪಟ್ಟ ಮಾಹಿತಿ ತಿಳಿದು ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದು ಶಾಗ್ಯ ಡಿಆರ್ಎಫ್ಒ ಕಚೇರಿಗೆ ಒಳನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಗುಂಡೇಟಿಗೆ ಬಲಿಯಾದ ಮೂವರು ಕಳ್ಳ ಬೇಟೆಗಾರರಲ್ಲ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿಯನ್ನೇ ಮಾಡರಲಿಲ್ಲ. ಆದರೂ ಸಹ ಪ್ರತಿ ದಾಳಿಯ ಹೆಸರಿನಲ್ಲಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಮೃತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿಲ್ಲ. ಪ್ರತಿದಾಳಿಯ ನೆಪದಲ್ಲಿ ಮೂವರನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಪ್ರಕರಣ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವರು ಹೇಳಿದ್ದೇನು: ಘಟನೆ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳ ಜೊತೆ ಮಾತನಾಡಿದ್ದು- ಕಳ್ಳಬೇಟೆಗೆ ತೆರಳಿದ್ದವರು ಸಿಬ್ಬಂದಿ ಮೇಲೆ ನಾಡಬಂದೂಕುಗಳಿಂದ ದಾಳಿ ಮಾಡಿದಾಗ ಪ್ರತಿದಾಳಿ ಮಾಡಿದಾಗ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯರು, ಮೃತಪಟ್ಟವರು ಅಮಾಯಕರಾಗಿದ್ದು ಬೇಟೆಗೆ ಹೋಗಿರಲಿಲ್ಲ ಎನ್ನುತ್ತಿದ್ದಾರೆ, ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.ಇನ್ನು, ಹನೂರು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟಿಸುವ ಸಾಧ್ಯತೆ ಇರುವ ಹಿನ್ನೆಲೆ ಅರಣ್ಯ ಕಚೇರಿ ಸುತ್ತಮುತ್ತಲು ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
