Thursday, June 26, 2025

ಸತ್ಯ | ನ್ಯಾಯ |ಧರ್ಮ

ಪಿಎಸ್ ಐ ನೇಮಕಾತಿ ಹಗರಣ: ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಆರು ತಿಂಗಳ ತನಿಖೆಯ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತಾದ ತನಿಖಾ ವರದಿಯನ್ನು ನ್ಯಾಯಮೂರ್ತಿ ಬಿ ವೀರಪ್ಪ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ಪೂರ್ಣಗೊಳಿಸಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ ರಾಜ್ಯ ಸರ್ಕಾರ ಆಯೋಗವನ್ನು ರಚಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಲಾಗಿತ್ತು. ನಂತರ ಮತ್ತೆ ಮೂರು ತಿಂಗಳು ವಿಸ್ತರಿಸಲಾಯಿತು.

ವಿಚಾರಣೆ ವೇಳೆ ನ್ಯಾಯಮೂರ್ತಿ ವೀರಪ್ಪ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಈ ವಿಷಯದ ಬಗ್ಗೆ ಮಾತನಾಡಿದ್ದ ಹಲವು ರಾಜಕೀಯ ಮುಖಂಡರಿಗೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳಿದ್ದರೆ ಹಂಚಿಕೊಳ್ಳುವಂತೆ ಅವರು ಕೇಳಿದ್ದರು.

ಕಳೆದ ವರ್ಷ ನಡೆದ ಚುನಾವಣೆಯ ಸಂದರ್ಭದಲ್ಲಿ ಹಿಂದಿನ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.

ಆಗಿನ ಬಿಜೆಪಿ ನೇತೃತ್ವದ ಸರ್ಕಾರವು ಅಕ್ಟೋಬರ್ 3, 2021 ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಪರೀಕ್ಷೆಗಳನ್ನು ನಡೆಸಿತ್ತು. ರಾಜ್ಯದಾದ್ಯಂತ 92 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು. 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಅಂದಿನ ಬಿಜೆಪಿ ಸರಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಿತ್ತು.

ಈ ಹಗರಣದಲ್ಲಿ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು, ಇದನ್ನು ಕೇಸರಿ ಪಕ್ಷ ನಿರಾಕರಿಸಿದೆ.

ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಮಂದಿಯನ್ನು ಸಿಐಡಿ ಬಂಧಿಸಿದೆ. ಈ ಪ್ರಕರಣದಲ್ಲಿ ನೇಮಕಾತಿ ಹೊಣೆ ಹೊತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರವು ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆಗಳಿಗೆ ಆದೇಶಿಸಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page