Friday, June 20, 2025

ಸತ್ಯ | ನ್ಯಾಯ |ಧರ್ಮ

‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣ ; ಬೊಮ್ಮಾಯಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು

“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಸಚಿವರು, ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಇಂದು ನಡೆದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರನ್ನು ಒಳಗೊಂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇದು ಸ್ಪಷ್ಟವಾಗಿ ಸಂವಿಧಾನದ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆ. ಒಬ್ಬ ಸರ್ಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂತಹ ಪ್ರಕರಣದ ನೇರ ಆರೋಪಿಯಾಗಿದ್ದಾರೆ. ಅವರನ್ನು ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುವ ಮೂಲಕ ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಇದು “ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ನೇರವಾಗಿ ಸರ್ಕಾರ ಮತ್ತು ಬಿಬಿಎಂಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ರಾಜ್ಯದ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಸಚಿವ ಅಶ್ವಥ್ ನಾರಾಯಣ್ ಮತ್ತು ಮುಖ್ಯಮಂತ್ರಿ ಮೇಲೆ ಆರೋಪಿಸಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಯೀಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಹಿರಿಯ ಸಚಿವರೆಲ್ಲರೂ ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ.

‘ಮೇಲಿನವರ’ ರಕ್ಷಣೆ ಇಲ್ಲದೆ ಮಹಾನಗರ ಪಾಲಿಕೆ ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡಲು ಅನುಮತಿ ನೀಡಲು ಹೇಗೆ ಸಾಧ್ಯ?

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು ಖಾಸಗಿ ಸಂಸ್ಥೆಗೆ ಇದನ್ನು ಒಪ್ಪಿಸುವುದೇ ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ.

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನಂತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಇತರೆ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು, ಚಿಲುಮೆ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ಪ್ರಕರಣದ ಅಡಿಯಲ್ಲಿ ಬರುವ ಎಲ್ಲರನ್ನೂ ಬಂಧಿಸುವಂತೆ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಜೊತೆಗೆ ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸುವ ಈ ರಾಜಕೀಯ ಸಂಚನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿಹಿಡಿದರುವ Newsminute ಸಂಸ್ಥೆಯ ಕಾರ್ಯವನ್ನು ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page