ಬೆಂಗಳೂರು: 2ಎ ವರ್ಗದ ಅಡಿಯಲ್ಲಿ ಮೀಸಲಾತಿ ನೀಡಬೇಕೆಂಬ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತರು ತಮ್ಮ ‘ವಿಧಾನಸೌಧ ಘೇರಾವ್’ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ನಿರ್ಧರಿಸಿ, ಸರ್ಕಾರದ ಮೇಲೆ ಒತ್ತಡ ಹೇರಲು ಸಮುದಾಯದ ಸದಸ್ಯರು ಡಿಸೆಂಬರ್ 13 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದರು. ಆದರೆ ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದ ಸಮುದಾಯದ ಮುಖಂಡರ ನಿಯೋಗವು ಗುರುವಾರ ತಡರಾತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನಂತರ ಮುತ್ತಿಗೆಯನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಪಂಚಮಸಾಲಿ ಸಮುದಾಯದವರ ಬೇಡಿಕೆಯ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬೊಮ್ಮಾಯಿ ನಿಯೋಗಕ್ಕೆ ಭರವಸೆ ನೀಡಿದ್ದರು, ಈ ಹಿನ್ನಲೆಯಲ್ಲಿ, ಪಂಚಮಸಾಲಿ ಲಿಂಗಾಯತರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿರ್ಧರಿಸಲು ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ಭಕ್ತವತ್ಸಲ ಹಿಂದುಳಿದ ವರ್ಗಗಳ ಆಯೋಗಕ್ಕೆ ವಹಿಸಲಾಗಿದೆ ಎಂದು ಸಿಎಂ ನಿಯೋಗಕ್ಕೆ ತಿಳಿಸಿದ್ದರು.
ʼಪ್ರಾಯೋಗಿಕ ದತ್ತಾಂಶವಿಲ್ಲದೆ ಸರ್ಕಾರವು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ, ಆಯೋಗವು ತನ್ನ ವರದಿಯನ್ನು ನೀಡುವವರೆಗೆ ಕಾಯಿರಿʼ ಎಂದು ಹೇಳಿತ್ತು. ಗುರುವಾರದ ಸಭೆಯಲ್ಲಿ, ನಿಯೋಗವು ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು ಮತ್ತು ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಆಯೋಗವು ತನ್ನ ವರದಿಯನ್ನು ಸಲ್ಲಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಸಿಎಂ ಅವರನ್ನು ಒತ್ತಾಯಿಸಿತ್ತು.
ʼಸರ್ಕಾರವು ವರದಿಯನ್ನು ಸಲ್ಲಿಸುವುದನ್ನು ಖಚಿತಪಡಿಸಿಕೊಳ್ಳುವುದು ಮಾತ್ರವಲ್ಲದೆ, 2 ಎ ವರ್ಗದ ಅಡಿಯಲ್ಲಿ ಮೀಸಲಾತಿಯನ್ನು ಘೋಷಿಸಬೇಕು. ಇಲ್ಲವಾದಲ್ಲಿ ಡಿ.22ರಿಂದ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದರು.
ಈ ಕುರಿತು ಮಾಧ್ಯಮದವರ ಜೊತೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರಾಯೋಗಿಕ ದತ್ತಾಂಶಗಳನ್ನು ಆಯೋಗ ಇನ್ನೂ ಸಂಗ್ರಹಿಸಿಲ್ಲ. ಆದರೆ ʼಸರ್ಕಾರವು ಬೇಡಿಕೆಯನ್ನು ಈಡೇರಿಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ಅವರು ಹೇಳಿದ್ದರು.
ಪಂಚಮಸಾಲಿ ಲಿಂಗಾಯತರು ಪ್ರಸ್ತುತ ಪ್ರವರ್ಗ 3ಬಿ ಅಡಿಯಲ್ಲಿ ಬರುತ್ತಾರೆ, ಆದರೆ 14% ಮೀಸಲಾತಿಯನ್ನು ಹೊಂದಿರುವ ಪ್ರವರ್ಗ 2 ಎ ಗೆ ಹೋಗಲು ಬಯಸುತ್ತಿದ್ದು, ಸಮುದಾಯದ ಬಹುಪಾಲು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ ಮತ್ತು ಸಾಮಾಜಿಕ ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದು ನಾಯಕರು ವಾದಿಸಿದ್ದಾರೆ. ಹೀಗಾಗಿ ಮೃತ್ಯುಂಜಯ ಸ್ವಾಮಿಗಳು ಈ ವರ್ಷದ ಆರಂಭದಲ್ಲಿ ಕೂಡಲ ಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಕೈಗೊಂಡು ಬೇಡಿಕೆಯನ್ನು ಒತ್ತಾಯಿಸಿದ್ದರು.