Friday, June 14, 2024

ಸತ್ಯ | ನ್ಯಾಯ |ಧರ್ಮ

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-19 – ಒಳಾಡಳಿತಕ್ಕೆ ಎಷ್ಟು, ಏನು?

ಒಳಾಡಳಿತ

  • ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ʻನೈತಿಕ ಪೊಲೀಸ್ ಗಿರಿʼಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್ಟಿದ್ದ ಸಾಮರಸ್ಯದ ವಾತಾವರಣವನ್ನು ಮರುನಿರ್ಮಿಸಲು ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ.
  • ಪೊಲೀಸ್‌ ಸಿಬ್ಬಂದಿಗೆ ಸುಸಜ್ಜಿತ ವಸತಿ ಗೃಹವನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಪೊಲೀಸ್‌ ಗೃಹ 2025 ಯೋಜನೆಯಡಿ ಪ್ರಸಕ್ತ ವರ್ಷ 2,125 ವಸತಿಗೃಹ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ವರ್ಷ 450 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  • ಪೊಲೀಸ್‌ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಹಂತ ಹಂತವಾಗಿ ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  • ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್‌ ಇಲಾಖೆಯಲ್ಲಿನ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್‌ ಠಾಣೆ ಮತ್ತು ಕಛೇರಿ ಕಟ್ಟಡಗಳು, ಎಂ.ಟಿ. ಶೆಡ್‌, ಶಸ್ತ್ರಾಗಾರ ಮುಂತಾದ ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  • ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಹೊಸದಾಗಿ ಐದು ಸಂಚಾರ ಪೊಲೀಸ್‌ ಠಾಣೆಗಳನ್ನು ಮತ್ತು ಆರು ಮಹಿಳಾ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು. ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪೊಲೀಸ್‌ ಠಾಣೆಗಳನ್ನು ಮತ್ತು ಕಛೇರಿಗಳನ್ನು ಬಲಪಡಿಸಲು ಎರಡು ಹಂತಗಳಲ್ಲಿ ಒಟ್ಟು 2,454 ಹುದ್ದೆಗಳನ್ನು ಸೃಜಿಸಲಾಗುವುದು.
  • ಅಪರಾಧಗಳ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅಪರಾಧ ತನಿಖಾ ವಿಭಾಗ (CID), ಸೈಬರ್‌ ಅಪರಾಧ ಘಟಕ (CCD) ಮತ್ತು ಸೈಬರ್‌ ಎಕನಾಮಿಕ್ಸ್‌ ಮತ್ತು ನಾರ್ಕೋಟಿಕ್ಸ್‌ (CEN) ಪೊಲೀಸ್‌ ಠಾಣೆಗಳ ಘಟಕಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲು ಕ್ರಮವಹಿಸಲಾಗುವುದು.
  • ಕರ್ತವ್ಯದ ಸಮಯದಲ್ಲಿ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ದಿನನಿತ್ಯ ಹೊಸ ಹೊಸ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲು ಅನುಕೂಲವಾಗುವಂತೆ ಪೊಲೀಸ್‌ ತರಬೇತಿ ಶಾಲೆಗಳನ್ನು
    20 ಕೋಟಿ ರೂ. ಗಳ ವೆಚ್ಚದಲ್ಲಿ ಬಲವರ್ಧನೆ ಮಾಡಲಾಗುವುದು.
  • ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಗೆ ಡ್ರೋನ್‌ ಕ್ಯಾಮರಾ, ಕಣ್ಗಾವಲು ಕ್ಯಾಮರಾ ಹಾಗೂ ಬಾಡಿವೋರ್ನ್‌ ಕ್ಯಾಮರಾಗಳನ್ನು ಒದಗಿಸಲು ಕ್ರಮವಹಿಸಲಾಗುವುದು.
  • ಬೆಂಗಳೂರು ಕೇಂದ್ರ ಕಾರಾಗೃಹದ ಮಾದರಿಯಲ್ಲಿ ರಾಜ್ಯದ ಇತರೆ ಏಳು ಕೇಂದ್ರ ಕಾರಾಗೃಹಗಳಲ್ಲಿ 10 ಕೋಟಿ ರೂ. ಗಳ ವೆಚ್ಚದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ (STP) ಕಾರ್ಯವನ್ನು ಹಾಗೂ ಐದು ಕೇಂದ್ರ ಕಾರಾಗೃಹಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಭದ್ರತಾ ವಾಚ್ ಟವರ್ ಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು.
  • ಕಾರಾಗೃಹದಲ್ಲಿನ ಬಂದಿಗಳಿಗೆ ಕೆಲಸ ನೀಡಲು ಮತ್ತು ಪುನರ್‌ ವಸತಿಗೆ ಪೂರಕವಾಗಿ ಕೌಶಲ್ಯ ತರಬೇತಿ ನೀಡಲು ರಾಜ್ಯದ ಕಾರಾಗೃಹಗಳಲ್ಲಿ ಹೊಸದಾಗಿ ಕಾರ್ಯಾಗಾರಗಳನ್ನು ಸ್ಥಾಪಿಸಲು ಮತ್ತು ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಕಾರ್ಯಾಗಾರಗಳನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು.
  • ರಾಜ್ಯದ ಕಾರಾಗೃಹಗಳಲ್ಲಿನ ಬಂದಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸುವ ವ್ಯವಸ್ಥೆಯನ್ನು ಬಲಪಡಿಸಲು ಮೂರು ಕೋಟಿ ರೂ.ಗಳ ಅನುದಾನವನ್ನು ಒದಗಿಸಲು ಉದ್ದೇಶಿಸಲಾಗಿದೆ.
  • ಬೆಂಗಳೂರಿನಲ್ಲಿರುವ ಕರ್ನಾಟಕ ಪ್ರಿಸನ್ಸ್ ಅಕಾಡೆಮಿಯನ್ನು ಪ್ರಸಕ್ತ ವರ್ಷದಲ್ಲಿ ಕಾರ್ಯಾರಂಭಗೊಳಿಸಲು ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಲು ಐದು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  • ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಡಿ
    2023-24ನೇ ಸಾಲಿನಲ್ಲಿ ಕೆ-ಸೇಫ್‌ ಯೋಜನೆಯಡಿ ಸೂಪ, ಯಲಹಂಕ, ಭಟ್ಕಳ, ಅರಕೇರಾ, ನಾಗರಬಾವಿ, ಎನ್.ಆರ್.ಪುರ, ಶಿರಹಟ್ಟಿ, ಹೊನ್ನಾವರ, ನರಸಾಪುರ (ಕೋಲಾರ ಜಿಲ್ಲೆ) ಕೈಗಾರಿಕಾ ಪ್ರದೇಶ ಮತ್ತು ದೇವನಹಳ್ಳಿ ಏರೋಸ್ಪೇಸ್‌ ಕೈಗಾರಿಕಾ ಪ್ರದೇಶಗಳಲ್ಲಿ 3 ಬೇ ಅಗ್ನಿಶಾಮಕ ಠಾಣಾ (3 Bay fire stations) ಕಟ್ಟಡಗಳ ನಿರ್ಮಾಣವನ್ನು ಹಾಗೂ ಅಗತ್ಯವಿರುವ ಅಗ್ನಿಶಾಮಕ ವಾಹನಗಳನ್ನು 100 ಕೋಟಿ ರೂ. ಗಳ ವೆಚ್ಚದಲ್ಲಿ ಒದಗಿಸಲಾಗುವುದು.
  • ಅಗ್ನಿಶಮನ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಹೈ ಪ್ರೆಶರ್‌ ವಾಟರ್‌ ಮಿಸ್ಟ್‌ (High pressure water mist), ಫೋಮ್‌ ಕಾಂಪೌಂಡ್‌ (Foam compound) ಮತ್ತು ಏರ್‌ ಬ್ಲೋವರ್‌
    (Air blower) ಮುಂತಾದ ಯಂತ್ರೋಪಕರಣಗಳನ್ನು ಸಂಗ್ರಹಿಸಲು ಪ್ರಸಕ್ತ ವರ್ಷ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
    ಸಾರಿಗೆ
  • ಭಾರತದ ಒಟ್ಟಾರೆ ಉದ್ಯೋಗಸ್ಥರಲ್ಲಿ ಮಹಿಳೆಯರ ಪ್ರಮಾಣ
    ಶೇ. 29 ಮಾತ್ರವಿದೆ. ಜಿಡಿಪಿಗೆ ಮಹಿಳೆಯರ ಕೊಡುಗೆಯು ಕೇವಲ
    ಶೇ. 17 ರಷ್ಟಿದ್ದು, ಇದು ಜಾಗತಿಕ ಸರಾಸರಿ ಶೇ. 40 ಕ್ಕಿಂತ ಗಣನೀಯವಾಗಿ ಕಡಿಮೆ ಪ್ರಮಾಣದಲ್ಲಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ತೊಡಗಿದಲ್ಲಿ, ಬಡ ಮತ್ತು ಕೆಳಮಧ್ಯಮ ವರ್ಗಗಳ ಕೊಳ್ಳುವ ಸಾಮರ್ಥ್ಯ ಹೆಚ್ಚಳವಾಗುವುದು. ಸಹಜವಾಗಿ ಇದು ಆರ್ಥಿಕತೆಯ ಚಲನಶೀಲತೆಗೆ ಹೆಚ್ಚಿನ ವೇಗ ನೀಡಲಿದೆ.
  • ಮಹಿಳೆಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಾದ BMTC, KSRTC, NWKRTC ಹಾಗೂ KKRTC ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯದ ʻಶಕ್ತಿʼ ಯೋಜನೆಯು ದುಡಿಯುವ, ಓದುವ ಹೆಣ್ಣು ಮಕ್ಕಳ ಕನಸುಗಳಿಗೆ ರೆಕ್ಕೆ ಮೂಡಿಸುವ ಯೋಜನೆಯಾಗಿದೆ. ಎಲ್ಲ ವರ್ಗದ ಮಹಿಳೆಯರಿಗೂ ವೇಗದೂತ, ಸಾಮಾನ್ಯ ಸಾರಿಗೆ ಬಸ್‌ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವುದರಿಂದ ಬಡತನದ ಕಾರಣ ತಮ್ಮ ಸುತ್ತ ತಾವೇ ನಿರ್ಮಿಸಿಕೊಂಡ ಬೇಲಿಯನ್ನು ಅಳಿಸಿ, ನಿರ್ಬಂಧಗಳನ್ನು ಹೋಗಲಾಡಿಸಿ, ಶಿಕ್ಷಣ, ಉದ್ಯೋಗ, ಪ್ರವಾಸ, ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳಲು ಉತ್ತಮ ಅವಕಾಶ ಕಲ್ಪಿಸಿದಂತಾಗಿದೆ. ದೂರದ ಸ್ಥಳಗಳಿಗೂ ಹೋಗಿ ಉದ್ಯೋಗ ಕೈಗೊಳ್ಳಲು ಸಾಧ್ಯವಾಗುತ್ತದೆ. ಪ್ರಯಾಣ ವೆಚ್ಚದ ಉಳಿತಾಯ ಅವರಿಗೆ ದೈನಂದಿನ ಬದುಕಿನಲ್ಲಿ ಮತ್ತಷ್ಟು ಬಲ ತುಂಬಲಿದೆ. ಈ ಯೋಜನೆ ಜಾರಿಯಾದ ನಂತರ ಇಲ್ಲಿಯವರೆಗಿನ 25 ದಿನಗಳಲ್ಲಿ
    13 ಕೋಟಿಗೂ ಹೆಚ್ಚು ಟಿಕೆಟ್‌ಗಳನ್ನು ನೀಡಲಾಗಿದ್ದು, ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುವುದರಿಂದ ಮಹಿಳೆಯರಿಗೆ ನಿರ್ಭೀತಿಯಿಂದ ಯಾವುದೇ ಸಮಯದಲ್ಲೂ ಪ್ರಯಾಣಿಸಲು ಸುರಕ್ಷಿತ ವಾತಾವರಣ ಮೂಡಿದೆ. ಮಹಿಳೆಯರಿಂದ ಈ ಯೋಜನೆಗೆ ದೊರೆತಿರುವ ಅಭೂತಪೂರ್ವ ಸ್ಪಂದನೆಯು ಧನ್ಯತೆಯ ಭಾವ ಮೂಡಿಸಿದೆ. ʻಶಕ್ತಿʼ ಯೋಜನೆಗಾಗಿ ವಾರ್ಷಿಕ ಸುಮಾರು 4,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ.
  • ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ನಿಧಿಯಡಿ 2023-24ನೇ ಸಾಲಿನಿಂದ ಸಾರಿಗೆ, ಪೊಲೀಸ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಒದಗಿಸುವುದರ ಮೂಲಕ ರಸ್ತೆ ಸುರಕ್ಷತೆ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ. ಈ ಉದ್ದೇಶಕ್ಕಾಗಿ 2023-24 ನೇ ಸಾಲಿನಲ್ಲಿ 450 ಕೋಟಿ ರೂ. ಗಳನ್ನು ಒದಗಿಸಲಾಗಿರುತ್ತದೆ.
  • ರಾಜ್ಯದ ಹಲವಾರು ಪ್ರದೇಶಗಳಲ್ಲಿನ ವಾಯುಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಹಮ್ಮಿಕೊಳ್ಳಬೇಕಾಗಿರುತ್ತದೆ. ಈ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ ಹಸಿರು ತೆರಿಗೆ ನಿಧಿಯಲ್ಲಿ ಲಭ್ಯವಿರುವ ಮೊತ್ತದಲ್ಲಿ 2023-24 ನೇ ಸಾಲಿಗೆ 35 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿದೆ.
  • ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ದೃಷ್ಟಿಯಿಂದ ಚಾಲಕರಿಗೆ ತರಬೇತಿ ನೀಡುವ ಮೂಲಕ ಅವರ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿರುತ್ತದೆ. ಇದಕ್ಕಾಗಿ ಸುಸಜ್ಜಿತ ವಾಹನ ಚಾಲನಾ ತರಬೇತಿ ಕೇಂದ್ರಗಳನ್ನು ‍ಸ್ಥಾಪಿಸುವುದು ಮತ್ತು ಅವುಗಳನ್ನು ನಿರ್ವಹಿಸುವುದು ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ PPP ಮಾದರಿಯಲ್ಲಿ ರಾಮನಗರದ ಬಿಡದಿಯಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನಾ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರದಿಂದ ಐದು ಕೋಟಿ ರೂ.ಗಳ ಸಹಾಯಧನವನ್ನು ಒದಗಿಸಲಾಗುವುದು.

Related Articles

ಇತ್ತೀಚಿನ ಸುದ್ದಿಗಳು