ಬೆಂಗಳೂರು : ಪಿಎಫ್ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾ ಮಾಡಿದೆ.
ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯ ಕಚೇರಿ ಮತ್ತು ಅದರ ಸದಸ್ಯರ ಮನೆಗಳಲ್ಲಿ ದಾಳಿ ನಡೆಸಲಾಗಿತ್ತು. ನಂತರ ಕೇಂದ್ರ ಸರ್ಕಾರ ಕಳೆದ ಸೆಪ್ಟಂಬರ್ 28ರಂದು ಐದು ವರ್ಷಗಳವರೆಗೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಆದೇಶ ಹೊರಡಿಸಿತ್ತು.
ಕೇಂದ್ರ ಸರ್ಕಾರ ಆದೇಶಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಪಿಎಫ್ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಶಾ ಅವರು, ʼಪಿಎಫ್ಐಗೆ ತನ್ನ ವಾದ ಮಂಡನೆಗೆ ಕಾಲಾವಕಾಶ ನೀಡದೆ ಏಕಾಏಕಿ ನಿಷೇಧ ಆದೇಶ ಮಾಡಲಾಗಿದೆ. ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕುʼ ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ತುಷಾರ್ ಮೆಹ್ತಾಅವರು, ʼಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ನಂತರವೇ ಸಕಾರಣವಾಗಿಯೇ ಪಿಎಫ್ಐ ನಿಷೇಧಿಸಲಾಗಿದೆ. ಇದರಲ್ಲಿ ಕಾನೂನು ಬಾಹಿರವಾದುದೇನೂ ಇಲ್ಲʼ ಎಂದು ಹೇಳಿದ್ದರು.
ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕ ಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸುವಂತೆ ಬುಧವಾರದಂದು ತೀರ್ಪು ನೀಡಿದೆ.