ದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್–ಜೂನ್) ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಜಿಡಿಪಿ ಬೆಳವಣಿಗೆ ದರ ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಅಭಿನಂದನೆ ಸಲ್ಲಿಸಿರುವ ಅವರು, ಸ್ವದೇಶಿ ವಸ್ತುಗಳನ್ನೇ ಬಳಸುವಂತೆ ಹಾಗೂ ಅನಗತ್ಯ ವಿದೇಶ ಪ್ರವಾಸ ಮತ್ತು ಚಿನ್ನ ಖರೀದಿ ತಪ್ಪಿಸುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಕಿರ್ಗಿಸ್ತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. 7.8 ರಷ್ಟು ಬೆಳವಣಿಗೆ ಸಾಧಿಸಿರುವುದು ದೇಶದ ಜನರ ಸಂಕಲ್ಪ ಬಲ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಇಡೀ ವಿಶ್ವವೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಭಾರತ ಈ ಅಸಾಧಾರಣ ಮೈಲಿಗಲ್ಲು ತಲುಪಿದೆ ಎಂದು ಅವರು ಬಣ್ಣಿಸಿದ್ದಾರೆ.
ಜಗತ್ತು ಯುದ್ಧದ ಸಂಕಷ್ಟದಲ್ಲಿ ಮುಳುಗಿದ್ದು, ಎಲ್ಲಿ ನೋಡಿದರೂ ಯುದ್ಧದ ಸುದ್ದಿಗಳು, ಆರ್ಥಿಕ ಬಿಕ್ಕಟ್ಟು ಹಾಗೂ ಪೂರೈಕೆ ಸರಪಳಿ ಹಳಿ ತಪ್ಪಿರುವ ವರದಿಗಳೇ ಕೇಳಿಬರುತ್ತಿವೆ. 2020ರ ಕೋವಿಡ್ ನಂತರದಿಂದ ಇಂದಿನವರೆಗೂ ಜಾಗತಿಕವಾಗಿ ಸ್ಥಿರತೆಯೇ ಕಾಣಿಸುತ್ತಿಲ್ಲ. ಇಂತಹ ಜಾಗತಿಕ ಅನಿಶ್ಚಿತತೆಗಳ ನಡುವೆಯೂ ಭಾರತವು ಆರ್ಥಿಕವಾಗಿ ವೇಗವಾಗಿ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
