Home ರಾಜ್ಯ ಉತ್ತರ ಕನ್ನಡ ಪೊಲೀಸರು ತಮ್ಮ ಆರೋಗ್ಯ ಮತ್ತು ಕುಟುಂಬದ ಕಡೆಗೂ ಗಮನ ನೀಡಬೇಕು: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

ಪೊಲೀಸರು ತಮ್ಮ ಆರೋಗ್ಯ ಮತ್ತು ಕುಟುಂಬದ ಕಡೆಗೂ ಗಮನ ನೀಡಬೇಕು: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

0

ಕಾರವಾರ, ಡಿ.3: ಪ್ರತೀ ದಿನ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳು, ಒತ್ತಡ ನಿವಾರಣೆ ಕ್ರಮಗಳನ್ನು ಅಳವಡಿಸಿಕೊಂಡು, ತಮ್ಮ ಅರೋಗ್ಯ ಮತ್ತು ಕುಟುಂಬದ ಕಡೆಯೂ ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.

ಅವರು ಮಂಗಳವಾರ, ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಅದನ್ನು ನಿಭಾಯಿಸಲು ಪೊಲೀಸರು ಸದಾ ಸಿದ್ದರಿರುತ್ತಾರೆ, ಈ ಸಂದರ್ಭಗಳಲ್ಲಿ ಹಿರಿಯ ಅಧಿಕಾರಿಗಳು ನೀಡುವ ಆದೇಶಗಳನ್ನು ಯಥಾವತ್ತಾಗಿ ಪಾಲಿಸುವುದು ಅಗತ್ಯವಿದ್ದು, ಹಿರಿಯ ಅಧಿಕಾರಿಗಳು ನೀಡುವ ಎಲ್ಲಾ ಆದೇಶಗಳ ಹಿಂದೆ ಸಕಾರಣಗಳು ಮತ್ತು ಅದರದ್ದೇ ಆದ್ದ ಪ್ರಾಮುಖ್ಯತೆ ಇದ್ದು ಅವುಗಳನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಹಾಗೂ ಮತ್ತಿತರ ಕಡೆಗಳಿಂದ ಬರುವ ಒತ್ತಡಗಳನ್ನು ಸಮರ್ಥವಾಗಿ ನಿಭಾಯಿಸುವುದನ್ನು ಅರಿಯಬೇಕು ಎಂದರು.

ಪೊಲೀಸು ಸಿಬ್ಬಂದಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಒತ್ತಡ ನಿವಾರಣೆ ಮಾಡಿಕೊಳ್ಳಬಹುದಾಗಿದೆ, ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟು ಕುಟುಂಬದೊಂದಿಗೆ ಬೆರೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್. ಎಂ ಮಾತನಾಡಿ, ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ. ಜಿಲ್ಲೆಯ ಪೊಲೀಸರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು ಎಂದರು.

ಕಾರವಾರ ನೇವಲ್ ಬೇಸ್ನ ಕಮಾಂಡಿಂಗ್ ಆಫೀಸರ್ ಕ್ಯಾ. ವಿ.ಎಸ್.ಗುರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ, ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ವಿನೋದ್ ಕುಮಾರ್, ಕೊಂಕಣ ರೈಲ್ವೆಯ ಪ್ರಾದೇಶಿಕ ಮೆನೇಜರ್ ಆಶಾ ಶೆಟ್ಟಿ, ಕೋಸ್ಟ್‌ಗಾರ್ಡ್ ಕಮಾಂಡಿಗ್ ಆಫೀಸರ್ ಕಿರಣ್ ಕುಮಾರ್ ಸಿನ್ಹಾ, ಕದ್ರಾದ ಅಧೀಕ್ಷಕ ಇಂಜಿನಿಯರ್ ಶ್ರೀಧರ್ ಕೋರಿ, ಕೈಗಾ ಸಿ.ಐ.ಎಸ್.ಎಫ್.ನ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

You cannot copy content of this page

Exit mobile version