ಬೆಂಗಳೂರು : ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು (KEA) ಎಸ್ಎಸ್ಎಲ್ಸಿ ಪರೀಕ್ಷಾ ಕ್ರಮದಲ್ಲಿ ಐತಿಹಾಸಿಕ ತಿದ್ದುಪಡಿ ತಂದಿದೆ. ಇನ್ನು ಮುಂದೆ ವಿದ್ಯಾರ್ಥಿಗಳ ಒಟ್ಟು ಅಂಕಗಳ ಪಟ್ಟಿಯಲ್ಲಿ ತೃತೀಯ ಭಾಷೆಯಾದ ಹಿಂದಿ ವಿಷಯದ ಅಂಕಗಳನ್ನು ಸೇರಿಸಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರದ ಈ ಮಹತ್ವದ ನಡೆಯನ್ನು ಸ್ಯಾಂಡಲ್ವುಡ್ ನಟಿ ಪೂಜಾ ಗಾಂಧಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಕುರಿತು ತಮ್ಮ ಕೃತಜ್ಞತೆ ಸಲ್ಲಿಸಿರುವ ಅವರು, “ಕನ್ನಡ ಭಾಷೆಯ ಉಳಿವು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಸ್ವಾಗತಾರ್ಹ. ಇದು ಪ್ರಾದೇಶಿಕ ಭಾಷೆಗೆ ಹೆಚ್ಚಿನ ಒತ್ತು ನೀಡಲು ಸಹಕಾರಿಯಾಗಲಿದೆ,” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಕನ್ನಡದ ಬಗ್ಗೆ ತಮಗಿರುವ ಅಪಾರ ಗೌರವವನ್ನು ಪುನರುಚ್ಚರಿಸಿದ ನಟಿ ಪೂಜಾ ಗಾಂಧಿ, ಶಿಕ್ಷಣ ಕ್ಷೇತ್ರದಲ್ಲಿನ ಈ ಬದಲಾವಣೆಯು ವಿದ್ಯಾರ್ಥಿಗಳ ಮೇಲಿನ ಅನಗತ್ಯ ಹೊರೆ ತಗ್ಗಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
