ಸುಳ್ಯ: ಮಂಗಳೂರಿನಲ್ಲಿ ಇಂದು ನಡೆಯಲಿರುವ ಪ್ರಧಾನಿಗಳ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದೊಯ್ಯಲು ಸರಕಾರಿ ಬಸ್ಸುಗಳು ತೆರಳಿದ ಕಾರಣ ಸುಳ್ಯದಲ್ಲಿ ಬಸ್ ಸಂಚಾರದಲ್ಲಿ ಬಾರೀ ವ್ಯತ್ಯಯ ಉಂಟಾಗಿದೆ. ಬಸ್ ನಿಲ್ದಾಣ ಬಸ್ಸುಗಳಿಲ್ಲದೆ ಬಿಕೋ ಎನ್ನುತ್ತಿದೆ.
ಮೋದಿ ಕಾರ್ಯಕ್ರಮಕ್ಕೆ ಕೆಎಸ್ಆರ್ಟಿಸಿ ಬಸ್ಸುಗಳನ್ನು ಬುಕ್ ಮಾಡಿರುವುದರಿಂದ ಸುಳ್ಯದಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಸುಳ್ಯ ತಾಲೂಕಿನಿಂದ 3500ಕ್ಕೂ ಹೆಚ್ಚು ಫಲಾನುಭವಿಗಳು, ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳುವುದಕ್ಕೆ ಸರಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. 50 ಬಸ್ಸುಗಳು ತೆರಳಿವೆ ಎನ್ನಲಾಗುತ್ತಿದೆ.

ಸಾರ್ವಜನಿಕರು, ವಿದ್ಯಾರ್ಥಿಗಳು ಉದ್ಯೋಗಿಗಳು ಬಸ್ಸಿಲ್ಲದೆ ಸಂಕಷ್ಟ ಎದುರಿಸಬೇಕಾಯಿತು. ಗ್ರಾಮೀಣ ಭಾಗದ ಹಲವು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬರಲು ಸಾಧ್ಯವಾಗಿಲ್ಲ. ಬಸ್ಸಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು ಅಲ್ಲಲ್ಲೇ ಬಾಕಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.