ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿದಿದೆ.
ಜೆಡಿಎಸ್ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು.
2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.