Tuesday, June 18, 2024

ಸತ್ಯ | ನ್ಯಾಯ |ಧರ್ಮ

ಶುಕ್ರವಾರ ಬೆಳಗ್ಗಿನ ಜಾವ ಆಗಮಿಸಲಿರುವ ಪ್ರಜ್ವಲ್:‌ ಜರ್ಮನಿಯಿಂದ ಟಿಕೇಟ್‌ ಬುಕ್‌

ಬೆಂಗಳೂರು: ಹಾಸನದಲ್ಲಿ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ, ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಬವೇರಿಯಾದ ರಾಜಧಾನಿ ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗಿನ ಜಾವ ಪ್ರಜ್ವಲ್‌ ಆಗಮಿಸಲಿದ್ದಾರೆ ಎನ್ನಲಾಗಿದೆ.

ವಿಶೇಷ ತನಿಖಾ ತಂಡದ ಮೂಲಗಳ ಪ್ರಕಾರ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ 33 ವರ್ಷದ ಮೊಮ್ಮಗ ಮೇ 31ರ ಬೆಳಗಿನಜಾವ ಬೆಂಗಳೂರಿಗೆ ಬಂದಿಳಿಯುವ ನಿರೀಕ್ಷೆಯಿದೆ. ಬಂದಿಳಿದ ಕೂಡಲೇ ಆತನನ್ನು ಬಂಧಿಸಲು ಎಸ್‌ಐಟಿ ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿಗಾ ಇರಿಸಿಕೊಂಡು ಕಾಯುತ್ತಿದೆ.

ಹಾಸನ ಲೋಕಸಭೆ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿರುವ ಸಂಸದ, ಅಪಾರ ಪ್ರಮಾಣದ ಅಶ್ಲೀಲ ವಿಡಿಯೊ ಸಂಗ್ರಹದ ಬಗ್ಗೆ ತನಿಖೆಗೆ ಆದೇಶಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ ಎಂಬ ಸುದ್ದಿ ಹೊರಬಿದ್ದ ತಕ್ಷಣ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು.

ಇದುವರೆಗೆ ಪ್ರಜ್ವಲ್ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಎರಡು ದಿನಗಳ ಹಿಂದೆ ಹಾಸನ ಸಂಸದರು ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವುದಾಗಿ ಹೇಳಿಕೆ ನೀಡಿದ್ದಾರೆ.ಸಂಸದರು ಈ ಹಿಂದೆ ಎರಡು ಬಾರಿ ಜರ್ಮನಿಯಿಂದ ಟಿಕೆಟ್ ಬುಕ್ ಮಾಡಿದ ನಂತರ, ಪ್ರಯಾಣ ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೀಗಾಗಿ ಈ ಸಲವಾದರೂ ಪ್ರಜ್ವಲ್‌ ಬಂದೆ ಬರುತ್ತಾರಾ, ಆಥವಾ ತನಿಖೆಯ ದಿಕ್ಕು ತಪ್ಪಿಸಲು ಹೀಗೆ ನಾಟಕವಾಡುತ್ತಿದ್ದಾರಾ ಅನ್ನುವುದು ಮೇ.31ಕ್ಕೆ ತಿಳಿದು ಬರಲಿದೆ.

Related Articles

ಇತ್ತೀಚಿನ ಸುದ್ದಿಗಳು