ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವೇಳೆ ಅವರ ಭಾವಚಿತ್ರವಿದ್ದ ಪೋಸ್ಟರ್ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
‘ಸಮುದಾಯ ಜಗತ್ತು: ಮಾನವೀಯತೆಯ ಕಡೆಗೆ’ ಶೀರ್ಷಿಕೆಯಡಿ ನಡೆದ ಈ ಕಾರ್ಯಕ್ರಮದ ಹೊರಭಾಗದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಧರ್ಮಸ್ಥಳದ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿದರು. ಪ್ರಕಾಶ್ ರಾಜ್ ಅವರು ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುವ ಸಾಧ್ಯತೆಯಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಕೆಲ ಯುವಕರು ಸಭಾಂಗಣದೊಳಗೆ ನುಗ್ಗಲು ಮತ್ತು ಪ್ರಕಾಶ್ ರಾಜ್ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್, ಇಂತಹ ಪ್ರತಿಭಟನೆಗಳಿಂದ ತಮಗೆ ಯಾವುದೇ ಆಶ್ಚರ್ಯವಾಗಿಲ್ಲ ಎಂದು ಹೇಳಿದರು.
