ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇಲ್ಲಿಯವರೆಗೂ ವಿಧಾನಸೌಧದ ಮೊಗಸಾಲೆಯಲ್ಲೇ ಗಿರಕಿ ಹೊಡೆಯುತ್ತಿದ್ದ ಹನಿಟ್ರಾಪ್ ಪ್ರಕರಣ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ರಾಷ್ಟ್ರವ್ಯಾಪಿ ಸುದ್ದಿಯಾಗಿದೆ. ಇಂದು ಈ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.
ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಹಾಗೂ ಸಿಬಿಐ ತನಿಖೆಗೆ ಕೋರಿ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಗಿದೆ. ಬಿನಯ್ ಕುಮಾರ್ ಸಿಂಗ್ ಎಂಬುವರ ಪರವಾಗಿ ವಕೀಲ ಬರುಣ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸುಪ್ರೀಂ ಕೋರ್ಟ್ನ ನ್ಯಾ. ವಿಕ್ರಂನಾಥ್, ನ್ಯಾ. ಸಂಜಯ್ ಕರೋಲ್, ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಕುತೂಹಲಕಾರಿ ಹಂತದಲ್ಲಿ ರಾಜ್ಯದಲ್ಲಿ ಹಾನಿ ಟ್ರಾಪ್ ಪ್ರಕರಣ ಬಹಳ ದೊಡ್ಡ ಸದ್ದು ಮಾಡುತ್ತಿದ್ದು, ಕೇವಲ ರಾಜಕಾರಣಿಗಳು ಮಾತ್ರವಲ್ಲದೆ ನ್ಯಾಯಮೂರ್ತಿಗಳನ್ನೂ ಈ ಜಾಲದೊಳಗೆ ಬೀಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಇದೊಂದು ಗಂಭೀರ, ಆಘಾತಕಾರಿ ವಿಷಯ. ವ್ಯಕ್ತಿಗಳ ವೈಯುಕ್ತಿಕ ಗೌರವವನ್ನ ಉಳಿಸಬೇಕು. ಇದೊಂದು ದೊಡ್ಡ ಹಗರಣವಾಗಿರುವ ಸಾಧ್ಯತೆ ಇರುವದರಿಂದ ಕೂಲಂಕುಶ ತನಿಖೆಯಾದರೆ ಎಲ್ಲ ಸತ್ಯಾಸತ್ಯತೆ ಹೊರಬರಲಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯ ವಿಚಾರಣೆ ನಡೆದು ಸಿಬಿಐಗೆ ವಹಿಸಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನವಾಗಲಿದೆ.