ಬೆಂಗಳೂರು: ಆರು ತಿಂಗಳ ವಿಳಂಬದ ನಂತರ ಬಿಜೆಪಿ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕನ್ನಾಗಿ ಘೋಷಿಸಿದೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಪಕ್ಷದ ವೀಕ್ಷಕರು ಕೆಲವು ಶಾಸಕರ ಜತೆ ಒಂದೊಂದು ಸಭೆ ನಡೆಸಿದ ಬಳಿಕ ಈ ಘೋಷಣೆ ಮಾಡಲಾಗಿದೆ. ವಿಧಾನ ಪರಿಷತ್ತಿಗೆ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರು ಬಹುತೇಕ ಫೈನಲ್ ಆಗಿದೆ
ಬೆಂಗಳೂರಿನ ಪದ್ಮನಾಭ ನಗರ ಶಾಸಕ ಆರ್ ಅಶೋಕ ಅವರು ಉಪಮುಖ್ಯಮಂತ್ರಿ, ಗೃಹ ಸಚಿವ, ಕಂದಾಯ ಸಚಿವ ಹಾಗೂ ವಿರೋಧ ಪಕ್ಷದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದರು. ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ನಿರ್ಣಾಯಕವಾಗಲಿರುವ ಒಕ್ಕಲಿಗ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಈ ಆಯ್ಕೆಯನ್ನು ಮಾಡಲಾಗಿದೆ.
ಲಿಂಗಾಯತ ಮುಖಂಡ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಒಕ್ಕಲಿಗ ನಾಯಕ ಆರ್.ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ. ಪರಿಷತ್ತಿನಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಿಗೆ ಪಕ್ಷವು ಪ್ರಾತಿನಿಧ್ಯ ನೀಡುವ ಸಾಧ್ಯತೆಯಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.