ಪಶ್ಚಿಮ ಬಂಗಾಳದ ಲೋಕ ಭವನ ಮೂಲಗಳ ಪ್ರಕಾರ, ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಆನಂದ್ ಬೋಸ್ ಅವರು ಕಳೆದ ಮೂರೂವರೆ ವರ್ಷಗಳಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಅವಧಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ನಡುವೆ ಹಲವು ವಿಷಯಗಳಲ್ಲಿ ತೀವ್ರ ಭಿನ್ನಾಭಿಪ್ರಾಯಗಳು ತಲೆದೂರಿದ್ದವು. ಸದ್ಯ ಆನಂದ್ ಬೋಸ್ ಅವರು ದೆಹಲಿಯಲ್ಲಿದ್ದು, ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ
ರಾಜ್ಯಪಾಲರ ರಾಜೀನಾಮೆ ಸುದ್ದಿಗೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ, “ರಾಜ್ಯಪಾಲರ ರಾಜೀನಾಮೆ ವಿಷಯ ಕೇಳಿ ನನಗೆ ಆಘಾತವಾಗಿದೆ. ಇದಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ನನಗೂ ತಿಳಿದಿಲ್ಲ. ಆದರೆ ರಾಜ್ಯದಲ್ಲಿ ಚುನಾವಣೆ ಹತ್ತಿರವಿರುವಾಗ ಕೇಂದ್ರದಿಂದ ಅವರ ಮೇಲೆ ರಾಜಕೀಯ ಒತ್ತಡ ಹೇರಿರುವ ಸಾಧ್ಯತೆಯಿದೆ” ಎಂದು ಹೇಳಿದರು.
ತಮಿಳುನಾಡು ರಾಜ್ಯಪಾಲರಾಗಿದ್ದ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳಕ್ಕೆ ನೇಮಕ ಮಾಡಿರುವುದಕ್ಕೆ ಮಮತಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಹೊಸ ರಾಜ್ಯಪಾಲರ ನೇಮಕ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ನನ್ನನ್ನು ಸಂಪರ್ಕಿಸಿಲ್ಲ. ಇದು ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿದ್ದು, ಫೆಡರಲ್ ವ್ಯವಸ್ಥೆಗೆ ಕೇಂದ್ರವು ಗೌರವ ನೀಡಬೇಕು” ಎಂದು ಕಿಡಿಕಾರಿದರು. ರಾಜ್ಯದಲ್ಲಿ ಅಸೆಂಬ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ಮುನ್ನವೇ ನಡೆದ ಈ ಬದಲಾವಣೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
