Home ದೇಶ ಶ್ರೀರಾಮನ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ದೂರು ಮರುಪರಿಶೀಲಿಸುವಂತೆ ಯುಪಿ ಕೋರ್ಟ್ ಆದೇಶ!

ಶ್ರೀರಾಮನ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ದೂರು ಮರುಪರಿಶೀಲಿಸುವಂತೆ ಯುಪಿ ಕೋರ್ಟ್ ಆದೇಶ!

0

ಅಮೆರಿಕದ ವಿಶ್ವವಿದ್ಯಾಲಯವೊಂದರಲ್ಲಿ ಭಾಷಣ ಮಾಡುವಾಗ ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ದೂರನ್ನು ಮರುಪರಿಶೀಲಿಸುವಂತೆ ಉತ್ತರ ಪ್ರದೇಶದ ವಾರಾಣಸಿಯ ವಿಶೇಷ ಎಂಪಿ-ಎಮ್‌ಎಲ್‌ಎ (MP-MLA) ನ್ಯಾಯಾಲಯವು ಕೆಳ ನ್ಯಾಯಾಲಯಕ್ಕೆ ಮಹತ್ವದ ನಿರ್ದೇಶನ ನೀಡಿದೆ.

ಕಳೆದ ವರ್ಷ (2025) ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದ ‘ವಾಟ್ಸನ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಅಂಡ್ ಪಬ್ಲಿಕ್ ಅಫೇರ್ಸ್’ನಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಅವರು ರಾಜಕೀಯ ಮತ್ತು ಧರ್ಮದ ಕುರಿತು ಚರ್ಚಿಸುವಾಗ, ಶ್ರೀರಾಮನನ್ನು ಕೇವಲ ಒಂದು “ಪೌರಾಣಿಕ ಮತ್ತು ಕಾಲ್ಪನಿಕ ಪಾತ್ರ” ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ವಕೀಲ ಹರಿಶಂಕರ್ ಪಾಂಡೆ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ರಾಹುಲ್ ಅವರ ಈ ಹೇಳಿಕೆಯು ಸನಾತನ ಧರ್ಮ ಹಾಗೂ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರುದಾರರು ವಾದಿಸಿದ್ದರು. ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳಡಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಬೇಕು ಎಂದು ಅವರು ಕೋರಿದ್ದರು.

ಆದರೆ, ಈ ದೂರನ್ನು ಮೇ 2025 ರಲ್ಲಿ ವಿಚಾರಣೆ ನಡೆಸಿದ್ದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ACJM) ಕೋರ್ಟ್, ಲೋಕಸಭಾ ಸ್ಪೀಕರ್ ಅಥವಾ ಕೇಂದ್ರ ಸರ್ಕಾರದಿಂದ ಯಾವುದೇ ಪೂರ್ವಾನುಮತಿ (Sanction) ಪಡೆದಿಲ್ಲ ಎಂಬ ತಾಂತ್ರಿಕ ಕಾರಣ ನೀಡಿ ದೂರನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹರಿಶಂಕರ್ ಪಾಂಡೆ ಅವರು ಜಿಲ್ಲಾ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿ (Revision Petition) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಎಂಪಿ-ಎಮ್‌ಎಲ್‌ಎ ನ್ಯಾಯಾಲಯದ ನ್ಯಾಯಾಧೀಶರಾದ ಯಜುವೇಂದ್ರ ವಿಕ್ರಮ್ ಸಿಂಗ್ ಅವರು ಬುಧವಾರ ತೀರ್ಪು ನೀಡಿದ್ದಾರೆ.

ಕೆಳ ನ್ಯಾಯಾಲಯವು ದೂರುದಾರರಿಗೆ ಸೂಕ್ತ ವಿಚಾರಣೆಯ ಅವಕಾಶ ನೀಡದೆ, ಅವಧಿಗಿಂತ ಮುನ್ನವೇ ಅರ್ಜಿಯನ್ನು ವಜಾಗೊಳಿಸಿದೆ ಎಂದು ಅಭಿಪ್ರಾಯಪಟ್ಟಿರುವ ವಿಶೇಷ ನ್ಯಾಯಾಲಯ, ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಹಳೆಯ ಆದೇಶವನ್ನು ರದ್ದುಪಡಿಸಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಕಾನೂನು ನಿದರ್ಶನಗಳನ್ನು ಗಮನದಲ್ಲಿಟ್ಟುಕೊಂಡು ಈ ದೂರನ್ನು ಮೊದಲಿನಿಂದ ಹೊಸದಾಗಿ ಪರಿಶೀಲಿಸುವಂತೆ ಮತ್ತು ಕಾನೂನಿನ ಪ್ರಕಾರ ಸೂಕ್ತ ಆದೇಶ ಹೊರಡಿಸುವಂತೆ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (CJM) ಕೋರ್ಟ್‌ಗೆ ಸೂಚನೆ ನೀಡಿದೆ. ಈ ಹೊಸ ಆದೇಶದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಮರುಜೀವ ಬಂದಂತಾಗಿದ್ದು, ಕೆಳ ನ್ಯಾಯಾಲಯದಲ್ಲಿ ಶೀಘ್ರದಲ್ಲೇ ಹೊಸದಾಗಿ ವಿಚಾರಣೆ ಆರಂಭವಾಗಲಿದೆ.

You cannot copy content of this page

Exit mobile version