ಮೈಸೂರು-ದರ್ಭಾಂಗ ರೈಲು ಅಪಘಾತದ ಕುರಿತು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಈ ಘಟನೆ ಬಾಲಸೋರ್ ದುರಂತಕ್ಕೆ ಕನ್ನಡಿ ಹಿಡಿಯುವಂತಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.
‘ಮೈಸೂರು-ದರ್ಭಾಂಗ ರೈಲು ಅಪಘಾತ. ಬಾಲಸೋರ್ ಘಟನೆಗೆ ಕನ್ನಡಿ ಹಿಡಿದಂತಿದೆ. ಎಷ್ಟೇ ಅವಘಡಗಳು ಸಂಭವಿಸಿದರೂ, ಎಷ್ಟು ಪ್ರಾಣಗಳು ಹೋದರೂ ಪಾಠ ಕಲಿತಿಲ್ಲ. ಸರ್ಕಾರಕ್ಕೆ ಹೊಣೆಗಾರಿಕೆ ಬೇಕು. ಈ ಸರ್ಕಾರ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು?’ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ರಾತ್ರಿ ಚೆನ್ನೈ ಸಮೀಪದ ಕವರೈಪಟ್ಟೈ ಎಂಬಲ್ಲಿ ರೈಲು ಅಪಘಾತ ಸಂಭವಿದೆ. ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ನಿಂತಿದ್ದ ಸರಕು ಗಾಡಿಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಎರಡು ಎಕ್ಸ್ಪ್ರೆಸ್ ಬೋಗಿಗಳು ಸುಟ್ಟು ಕರಕಲಾಗಿವೆ. ಸುಮಾರು 12 ಬೋಗಿಗಳು ಹಳಿತಪ್ಪಿದವು. ಈ ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ. ತಕ್ಷಣವೇ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದವು. ಅಪಘಾತದ ಸಮಯದಲ್ಲಿ ರೈಲಿನಲ್ಲಿ 1,360 ಪ್ರಯಾಣಿಕರಿದ್ದರು ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಡಾ.ಟಿ.ಪ್ರಭುಶಂಕರ್ ತಿಳಿಸಿದ್ದಾರೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ವರ್ಷ ಜೂನ್ 2ರಂದು ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಬಹನಾಗಾ ಬಜಾರ್ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಯಶವಂತಪುರ-ಹೌರಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ 278 ಮಂದಿ ಪ್ರಾಣ ಕಳೆದುಕೊಂಡು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.