ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್ ಘಟಕ ತಮ್ಮ ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಪೋಸ್ಟ್ನಲ್ಲಿ, ಬೆಂಗಳೂರಿನಲ್ಲಿ ಎಲ್ಲೇಲ್ಲಿ ಮಳೆ ಹಾನಿಯಾಗಿದೇಯೋ ಆ ಎಲ್ಲಾ ಪ್ರದೇಶಗಳು ಬಿಜೆಪಿ ಶಾಸಕರು ಇರುವಂತಹ ಸ್ಥಳಗಳು, ಇವು ಬಿಜೆಪಿ ಶಾಸಕರ ಕೆಲಸದ ವೈಕರಿಯನ್ನ ತಿಳಿಸುತ್ತದೆ ಎಂದು ಡಿ.ಕೆ.ಶಿವಕುಮಾರ್ ಅವರು ವ್ಯಂಗಿಸಿದ್ದಾರೆ ಎಂದು ಹೇಳಿದೆ.
ಜೊತೆಗೆ ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆಯೋ ಆ ಜಾಗಗಳ ಫೋಟೊ, ವಿಡಿಯೊ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ಡಿ.ಕೆ.ಶಿ ಅವರು ತಿಳಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕ ತಮ್ಮ ಪೋಸ್ಟ್ ಹಂಚಿಕೊಂಡಿದೆ.