ಬೆಂಗಳೂರು : ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಧ್ಯಕ್ಷ ಡಿ.ಕೆ.ಶಿವಕುಮಾರ್, ʼಖರ್ಚು ವೆಚ್ಚಗಳನ್ನು ಸರಿದೂಗಿಸಲು ಸರ್ಕಾರಿ ಶಾಲೆ ಮಕ್ಕಳು ಪ್ರತಿ ತಿಂಗಳು ಪೋಷಕರಿಂದ ₹100 ಸಂಗ್ರಹಿಸಿ ಶಾಲಾಭಿವೃದ್ಧಿ – ಮೇಲುಸ್ತುವಾರಿ ಸಮಿತಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯು ಅನ್ಯಾಯದ ಪರಮಾವಧಿ. ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂಬುದನ್ನು ಈ ನಿರ್ಧಾರ ದೃಢಪಡಿಸಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿದ್ದು, ಪೋಷಕರು ಆರ್ಥಿಕ ಸಂಕಷ್ಟದಲ್ಲಿರುವಾಗ ಶಾಲೆಯ ಖರ್ಚು ವೆಚ್ಚಗಳನ್ನು ಅವರ ಮೇಲೆ ಹೊರಿಸುವುದು ಯಾವ ನ್ಯಾಯ? ಸಂವಿಧಾನ ವಿಧಿ 21ಎ ಹಾಗೂ ಶಿಕ್ಷಣದ ಹಕ್ಕಿನ ನಿಯಮಗಳನ್ನೂ ಉಲ್ಲಂಘಿಸಿ ಈ ರೀತಿಯ ಅವೈಜ್ಞಾನಿಕ ನಿರ್ಧಾರ ಹೊರಡಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಹೊರಡಿಸಿರುವ ಸುತ್ತೋಲೆಯು ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಿಸುವ ಒಂದು ಹುನ್ನಾರ. ಸರ್ಕಾರಿ ಶಾಲೆ ಮಕ್ಕಳಿಗೆ ಅನ್ಯಾಯವಾಗುವುದನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಸಹಿಸುವುದಿಲ್ಲ. 2023ಕ್ಕೆ ಅಧಿಕಾರಕ್ಕೆ ಬಂದನಂತರ ಇಂತಹ ಶಿಕ್ಷಣ ವಿರೋಧಿ ನೀತಿಗಳನ್ನು ಹಿಂಪಡೆಯುತ್ತೇವೆ ಎಂದು ಕಿಡಿಕಾರಿದ್ದಾರೆ.