ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ? ಎನ್ನುವ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಘಟಕಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ದಕ್ಷ ನಾಯಕತ್ವದೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ಕಾಂಗ್ರೆಸ್ ಪಕ್ಷವನ್ನು ವ್ಯಂಗಿಸಿದ್ದಾರೆ.
ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು. ದಿಲ್ಲಿ ಪೋಸ್ಟ್ ಮ್ಯಾನ್ ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೆ? ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ ಇತಿಹಾಸ ಇದೆ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂಧಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದಿದ್ದಾರೆ.
ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಕಾಂಗ್ರೆಸ್ ಘಟಕಕ್ಕೆ ಟಾಂಗ್ ಕೊಡುವ ಮೂಲಕ ತಮ್ಮ ಪಕ್ಷದ ಆಡಳಿತದ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.