ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೇ ದಿನ ಕಳೆಯುವಷ್ಟರಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದೆ. ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದರೆ ಸಚಿವ ಸ್ಥಾನ ಬೇಡ ಎಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಲಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. “ಸಚಿವ ಸ್ಥಾನ ಬೇಡ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ಮುಖ್ಯಮಂತ್ರಿಗೆ ನೇರವಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ, ಆಗ ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ ಅವರಿಗೆ “ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆ ನಿಮಗೇ ನೀಡುತ್ತೇನೆ” ಎಂದು ಮಾತು ನೀಡಿ, ಆ ಖಾತೆಯನ್ನು ತಾವೇ ಪಡೆದಿದ್ದರು. ಆ ಭರವಸೆಯನ್ನೇ ನೆನಪಿಸಿ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಮುಖ್ಯಮಂತ್ರಿ ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಮನವೊಲಿಸಲು ಯತ್ನಿಸಿದ್ದಾರೆ. ಪಕ್ಷದ ವರಿಷ್ಠರೂ ಸಹ ರಾಮಲಿಂಗಾರೆಡ್ಡಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಧಾನಪಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೂ ಅವರು ಇನ್ನೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡ ಮರುದಿನವೇ ಈ ರೀತಿಯ ಆಂತರಿಕ ಬಿಕ್ಕಟ್ಟು ತಲೆದೋರಿರುವುದು ರಾಜಕೀಯ ವಲಯದಲ್ಲಿ ನಾನಾ ಚರ್ಚೆಗಳಿಗೆ ಕಾರಣವಾಗಿದೆ.
