Sunday, June 22, 2025

ಸತ್ಯ | ನ್ಯಾಯ |ಧರ್ಮ

ಲೋಕಸಭೆಗೆ ಸ್ಪರ್ಧಿಸಲು ಸಿದ್ಧ : ಯತೀಂದ್ರ ಸಿದ್ದರಾಮಯ್ಯ

ಪಕ್ಷದ ಹೈಕಮಾಂಡ್ ಮತ್ತು ವರಿಷ್ಠರು ಸೂಚಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಆ ಮೂಲಕ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತವನ್ನು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಂದೆ ಸಿದ್ದರಾಮಯ್ಯನವರಿಗೆ ತಮ್ಮ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿದ ನಂತರ ರಾಜಕೀಯ ವಲಯದಲ್ಲಿ ಯತೀಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ, ಪಕ್ಷದಲ್ಲಿನ ಅವರ ಸ್ಥಾನಮಾನದ ಬಗ್ಗೆ ಹೆಚ್ಚು ಚರ್ಚೆಗಳು ಎದ್ದಿದ್ದವು. ಎಲ್ಲೋ ಒಂದು ಕಡೆ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಎಂಬ ಮಾತುಗಳೂ ಸಹ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಸಭೆಗೆ ಸ್ಪರ್ಧಿಸಲು ರೆಡಿ ಇದ್ದೇನೆ, ಅದೂ ವರಿಷ್ಠರು ಸೂಚಿಸಿದರೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ಕಾರಣ ವರುಣಾ ಕ್ಷೇತ್ರದ ಕಡೆಗೆ ಗಮನಿಸಲು ಸಮಯ ಆಗುತ್ತಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಆಗಬೇಕಾದ ಬಹುತೇಕ ಕಾರ್ಯಗಳನ್ನು ನಾನೇ ನಿಂತು ನಿಭಾಯಿಸುತ್ತಿದ್ದೇನೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದೇನೆ. ಆದರೆ ಸಾಂವಿಧಾನಿಕವಾಗಿ ಇರಬೇಕಾದ ಸ್ಥಾನಮಾನ ನನಗೆ ಇಲ್ಲದ ಕಾರಣ ಎಲ್ಲದಕ್ಕೂ ಮುಂದೆ ನಿಲ್ಲಲು ಹಲವು ಕಾನೂನಿನ ತೊಡಕಿದೆ. ಹಾಗಾಗಿ ಯಾವುದಾದರೊಂದು ಸರ್ಕಾರಿ ಸ್ಥಾನಮಾನ ಸಿಕ್ಕರೂ ವರುಣಾ ಮಾತ್ರವಲ್ಲದೆ ಬೇರೆ ಅಗತ್ಯವಿರುವ ಕ್ಷೇತ್ರಗಳಲ್ಲೂ ಉತ್ತಮವಾಗಿ ಕೆಲಸ ನಿರ್ವಹಿಸುವ ಬಗ್ಗೆ ಹೆಚ್ಚಿನ ಗಮನ ವಹಿಸುತ್ತೇನೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಈ ಬಾರಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕಿದೆ. ಆ ನಿಟ್ಟಿನಲ್ಲಿ ಮುಂದಿನ ಕೆಲಸ ಮಾಡಲಾಗುತ್ತಿದೆ. ಪಕ್ಷದ ವರಿಷ್ಠರು ಸೂಚಿಸಿದರೆ ಲೋಕಸಭೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page