Saturday, June 15, 2024

ಸತ್ಯ | ನ್ಯಾಯ |ಧರ್ಮ

ಖ್ಯಾತ ಚಿಂತಕರು, ಲೇಖಕರಾದ ಪ್ರೊಫೆಸರ್ ಗಂಗಾಧರ ಮೂರ್ತಿಯವರ ನಿಧನ

ಕನ್ನಡದ ಖ್ಯಾತ ಲೇಖಕರು, ಚಿಂತಕರಾದ ಪ್ರೊ.ಗಂಗಾಧರ ಮೂರ್ತಿಯವರು ಇಂದು ಸಂಜೆ 5.30 ಕ್ಕೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಲ್ಲಿ ನಿನ್ನೆ ಸೆ. 9 ರ ಮಧ್ಯಾಹ್ನದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಅಸುನೀಗಿದ್ದಾರೆ.

77 ವರ್ಷದ ಗಂಗಾಧರ ಮೂರ್ತಿಯವರು ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶ್ರೀಯುತರು ಕಳೆದ ನಾಲ್ಕು ದಶಕಗಳಿಂದ ದಲಿತ ಸಾಹಿತ್ಯ, ಬಂಡಾಯ ಸಾಹಿತ್ಯ, ಜನ ಚಳುವಳಿ, ವಿಚಾರವಾದಿ ಚಳುವಳಿಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬರಹಗಾರರಾಗಿ, ಅನುವಾದಕರಾಗಿ, ಸಂಪಾದಕರಾಗಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಇವರು ‘ಭಾರತ ಜ್ಞಾನ ವಿಜ್ಞಾನ ಸಮಿತಿ’ಯು ಪ್ರಕಟಿಸಿರುವ ಮಾಸ ಪತ್ರಿಕೆಗೆ ಕಳೆದ 12 ವರ್ಷಗಳಿಂದ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

1938 ರ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ ನಂತರ ‘ಕರ್ನಾಟಕದ ಜಲಿಯನ್ ವಾಲಾಭಾಗ್’ ಎಂದೇ ಕರೆಯಲಾಗುವ ವಿದುರಾಶ್ವತ್ಥದಲ್ಲಿ ರೂಪುಗೊಳ್ಳುತ್ತಿರುವ ಸ್ವತಂತ್ರ್ಯ ಸ್ಮಾರಕ ಸಂಕೀರ್ಣದ ಪರಿಕಲ್ಪನೆ ಮತ್ತು ವಿನ್ಯಾಸಕಾರರಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ಸಾಮಾಜಿಕ ಸಮಾನತೆಗಾಗಿ ದುಡಿಯುವ, ಮಿಡಿಯುವ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಲೇಬೇಕಾದ ಸ್ಥಳ ಅದು. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.. ಇಂದು ಸಂಜೆ ಮೃತರ ಪಾರ್ಥಿವ ಶರೀರ ಗೌರಿಬಿದನೂರಿಗೆ ತಂದು ನಾಳೆ ಮಧ್ಯಾಹ್ನದ ವೇಳೆಗೆ ಅಂತಿಮ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌.

Related Articles

ಇತ್ತೀಚಿನ ಸುದ್ದಿಗಳು