ನವದೆಹಲಿ: ಸನಾತನ ಧರ್ಮ ನಿರ್ಮೂಲನಾ ಸಮಾವೇಶದ ಹೆಸರಿನಲ್ಲಿ ಸೆಪ್ಟೆಂಬರ್ 2ರಂದು ನಡೆದ ಸಭೆ ಕುರಿತು ಸಿಬಿಐ ತನಿಖೆ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಮದ್ರಾಸ್ ಹೈಕೋರ್ಟ್ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ
ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅರ್ಜಿದಾರ ಬಿ ಜಗನ್ನಾಥ್ ಅವರನ್ನು ಹೈಕೋರ್ಟ್ಗೆ ಸಂಪರ್ಕಿಸದೆ ನೇರವಾಗಿ ಸುಪ್ರೀಂ ಕೋರ್ಟ್ಗೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿತು. ಒಬ್ಬ ವ್ಯಕ್ತಿ ಧರ್ಮದ ವಿರುದ್ಧ ಮಾತನಾಡಿದರೆ ಅದು ಬೇರೆ ವಿಷಯ, ಆದರೆ ಇಲ್ಲಿ ಒಬ್ಬ ರಾಜ್ಯ ಸಚಿವರು, ರಾಜ್ಯ ಸರ್ಕಾರವು ಧರ್ಮದ ವಿರುದ್ಧ ವರ್ತಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು.
ನೀವು ಸುಪ್ರೀಂ ಕೋರ್ಟ್ ಅನ್ನು ಪೊಲೀಸ್ ಠಾಣೆಯನ್ನಾಗಿ ಮಾಡುತ್ತಿದ್ದೀರಿ ಎಂದು ಪೀಠ ಪ್ರತಿಕ್ರಿಯಿಸಿದೆ. ಆದರೆ, ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು ಹೈಕೋರ್ಟ್ನಲ್ಲಿ ಬಾಕಿ ಇವೆ ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನಕ್ಕೆ ತಂದರು.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ, ಡಿಎಂಕೆ ನಾಯಕರಾದ ಪೀಟರ್ ಅಲ್ಫೋನ್ಸ್, ಎ ರಾಜಾ, ತೋಳ್ ತಿರುಮಾಳಲವನ್ ಮತ್ತು ಅವರ ಅನುಯಾಯಿಗಳ ವಿರುದ್ಧ ಭವಿಷ್ಯದಲ್ಲಿ ಸನಾತನ ಧರ್ಮ ಅಥವಾ ಹಿಂದೂ ಧರ್ಮದ ವಿರುದ್ಧ ಯಾವುದೇ ದ್ವೇಷದ ಭಾಷಣ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.