ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರಾಧಿ

ಬೆಂಗಳೂರು: 2010ರ ಬೇಲೆಕೇರಿ ಬಂದರಿನಲ್ಲಿನ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಈ ಪ್ರಕರಣದಡಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ‌ ಘೋಷಿಸಿದೆ. ಈ ಕುರಿತು ಶಿಕ್ಷೆಯ ಪ್ರಮಾಣವನ್ನು ನಾಳೆ ತಿಳಿಸುವುದಾಗಿ ಕೋರ್ಟ್‌ ಹೇಳಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿ ತೀರ್ಪು ನೀಡಿದೆ. ಬೇಲೆಕೇರಿಯಲ್ಲಿ ಜಪ್ತು ಮಾಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿಯಿಲ್ಲದೆ ಸಾಗಣೆ ಮಾಡಿದ ಆರೋಪ ಶಾಸಕರ ಮೇಲೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ದೂರುಗಳು ದಾಖಲಾಗಿದ್ದವು.

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ಕೋರ್ಟ್‌ ಪ್ರಕರಣವನ್ನು ಪರಿಹರಿಸಿದ್ದು, ನಾಳೆ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲಿದೆ.

Related Articles

ಇತ್ತೀಚಿನ ಸುದ್ದಿಗಳು