Home ರಾಜ್ಯ ಶಾಲೆಗಳಲ್ಲಿ ಜಾತ್ಯತೀತತೆ ಮತ್ತು ವೈಜ್ಞಾನಿಕ ಮನೋಭಾವದ ಶಿಕ್ಷಣ ನೀಡಬೇಕು: ಸಿದ್ದರಾಮಯ್ಯ

ಶಾಲೆಗಳಲ್ಲಿ ಜಾತ್ಯತೀತತೆ ಮತ್ತು ವೈಜ್ಞಾನಿಕ ಮನೋಭಾವದ ಶಿಕ್ಷಣ ನೀಡಬೇಕು: ಸಿದ್ದರಾಮಯ್ಯ

0

ಬೆಂಗಳೂರು: ಶಾಲೆಗಳಲ್ಲಿನ ಮಕ್ಕಳಿಗೆ ಜಾತ್ಯಾತೀತತೆ ಮತ್ತು ವೈಜ್ಞಾನಿಕ ಮನೋಭಾವದ ಅರಿವು ಮೂಡಿಸುವ ಶಿಕ್ಷಣ ನೀಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿಂದು ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಒಳ್ಳೆಯ ಕೆಲಸಕ್ಕೆ ಕೈಜೋಡಿಸಿ ಅವರಿಗೆ ಅಭಿನಂದನೆಗಳು ಎಂದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ಶಾಲೆಗಳಿಗೂ ವಿಸ್ತರಿಸುವ ಚಿಂತನೆ ಇದೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದುವ ವಾತಾವರಣವನ್ನು ಶಾಲೆಗಳಲ್ಲಿ ನಿರ್ಮಿಸಬೇಕು. ಆಗ ಮಾತ್ರ ಮಕ್ಕಳು ಸಮಾಜಮುಖಿ ಆಗುತ್ತಾರೆ ಎಂದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ, ಯಾಸ್ಮಿನ್ ಪ್ರೆಮ್ ಜಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೂಜ್ ಸೇರಿ, ಶಾಸಕ ರಿಜ್ವಾನ್ ಆರ್ಷದ್, ಅನುರಾಗ ಮೆಹರ್ ಹಾಜರಿದ್ದರು.

You cannot copy content of this page

Exit mobile version