ಹಾಸನ: ಇದೇ ತಿಂಗಳ ಫೆ.28 ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪೂರ್ವ ತಯಾರಿ ಕುರಿತು ನಗರದ ಸಂಸದರ ಕಚೇರಿಯಲ್ಲಿ, ಶ್ರೇಯಸ್ ಎಂ.ಪಟೇಲ್ ಅವರು ಪದವಿಪೂರ್ವ ಶಿಕ್ಷಣ ಉಪ ನಿರ್ದೇಶಕರು ಮತ್ತು ಪರೀಕ್ಷಾ ಕೇಂದ್ರಗಳ ಪ್ರಾಚಾರ್ಯ ರೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ.
ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾದ್ಯಂತ 14759 ಹೊಸ ವಿದ್ಯಾರ್ಥಿಗಳು, 305 ಖಾಸಗಿ ಅಭ್ಯರ್ಥಿಗಳು, 715 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 15782 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದಾರೆ. ಜಿಲ್ಲಾದ್ಯಂತ 33 ಪರೀಕ್ಷಾ ಕೇಂದ್ರ ತೆರೆಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಸಂಸದರು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದು, ಪರೀಕ್ಷೆಯ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಕಾಡಾನೆ ಹಾವಳಿ ಇರುವ ಮಲೆನಾಡು ಭಾಗದಲ್ಲಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ನೀರಿನ ವ್ಯವಸ್ಥೆ, ಮೂಲ ಸೌಕರ್ಯಗಳ ಬಗ್ಗೆ ಹಾಗೂ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವಾಗ ಕಟ್ಟುನಿಟ್ಟಿನ ಕ್ರಮ ಅನುಸರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಜೊತೆಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿ, ಒಳ್ಳೆಯ ಫಲಿತಾಂಶದೊಂದಿಗೆ ಜಿಲ್ಲೆಗೆ ಕೀರ್ತಿ ತರಬೇಕೆಂದು ಸಂಸದರು ಶುಭ ಹಾರೈಸಿದ್ದಾರೆ.
