Saturday, August 3, 2024

ಸತ್ಯ | ನ್ಯಾಯ |ಧರ್ಮ

ಮುಂದೆಯೂ ಸಿದ್ದರಾಮಯ್ಯರೇ ಸಿಎಂ, ಗೌಡ ಲಿಂಗಾಯತ ಶಾಸಕರೆಲ್ಲ ಸಿದ್ದರಾಮಯ್ಯ ಜೊತೆಗಿದ್ದೇವೆ: ರಾಯರಡ್ಡಿ

ಕೊಪ್ಪಳ: ಉಳಿದ ಉಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು, ಇದು‌ ನನ್ನನ್ನು ಸೇರಿದಂತೆ ಗೌಡ, ಲಿಂಗಾಯತ ಶಾಸಕರೆಲ್ಲರ ಅಭಿಪ್ರಾಯವಾಗಿದೆ ಎಂದು ಸಿ.ಎಂ. ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಕೊಪ್ಪಳದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣ ವಿಷಯದಲ್ಲಿ ಮುಖ್ಯಮಂತ್ರಿ ಅವರ ಹೆಸರಿಗೆ ‌ಮಸಿ ಬಳಿಯಲು ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ ನಡೆಸುತ್ತಿದೆ. ಇದಕ್ಕೆ ನಾವು ಬಗ್ಗುವುದಿಲ್ಲ. ನಾವೆಲ್ಲ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಬರುವುದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ಕೊಟ್ಟರೆ ನಾವೆಲ್ಲ ಕಾನೂನು ಹೋರಾಟ ನಡೆಸಲು ಹೈಕೋರ್ಟ್ ಮೊರೆ ಹೋಗುತ್ತೇವೆ. ಮುಡಾ ವಿಷಯದಲ್ಲಿ ‌ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೇನಾಮೆ ಕೊಡಲೂಬಾರದು ಎಂದರು.

ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜಾತಿ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಬಗ್ಗೆ ಕೂಡ ಜಾತಿ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ. ಇವರಿಗೆ ಸಿದ್ದರಾಮಯ್ಯ ತಂದಿರುವ ಒಳ್ಳೆಯ ಯೋಜನೆಗಳು ಕಾಣುತ್ತಿಲ್ಲ. ತಮ್ಮ ಹಗರಣಗಳನ್ನು‌ ಮರೆಮಾಚಲು ಸಿ.ಎಂ. ಮೇಲೆ ಗೂಬೆ ಕೂರಿಸುತ್ತಿದ್ದಾರೆ‌‌. ರಾಜ್ಯ ಸರ್ಕಾರವನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಯರೆಡ್ಡಿ ಒತ್ತಿ ಹೇಳಿದರು.

ಇತ್ತೀಚೆಗಷ್ಟೇ ಅಯ್ಕೆಯಾಗಿರುವ ಸಂಸದ ರಾಜಶೇಖರ ಹಿಟ್ನಾಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page