ಬೆಂಗಳೂರು : ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ಆರೋಪ ಮುಕ್ತರಾಗಿಲ್ಲ. ಸಿದ್ದರಾಮಯ್ಯ ನಿರಪರಾಧಿ ಎಂಬುದಾಗಿ ಹೈಕೋರ್ಟ್ ಎಲ್ಲೂ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಹೈಕೋರ್ಟಿನಲ್ಲಿ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ ಎಂದರು.
ಸಿದ್ದರಾಮಯ್ಯನವರನ್ನು ಆರೋಪ ಮುಕ್ತರನ್ನಾಗಿ ಹೈಕೋರ್ಟ್ ಮಾಡಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪನ್ನು ರಾಜ್ಯ ಹೈಕೋರ್ಟ್ ಹೇಳಿದೆ. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಅವರು ಸ್ಪಷ್ಟಪಡಿಸಿದರು.
ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ ಎಂದು ವಿಜಯೇಂದ್ರ ಹೇಳಿದರು.