ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುತ್ತಿರುವ ಪರೀಕ್ಷೆಗಳಲ್ಲಿ ಭಾರತೀಯ ಭಾಷೆಗಳನ್ನು ನಿರ್ಲಕ್ಷಿಸಿ, ಕೇವಲ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆ ನೀಡುತ್ತಿರುವುದನ್ನು ಪ್ರತಿಭಟಿಸಲು ಇಂದು ಕರ್ನಾಟಕ ರಕ್ಷಣಾ ವೇದಿಕೆ #SSCDroha ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ.
ಇಂದು ಸಂಜೆ 5 ಗಂಟೆಯಿಂದ ಅಭಿಯಾನ ಆರಂಭವಾಗಲಿದ್ದು, ಡಿಸೆಂಬರ್ ನಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು, ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂಬುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
ಸ್ಟಾಫ್ ಸೆಲೆಕ್ಷನ್ ಕಮಿಟಿ ಬಿ ಮತ್ತು ಸಿ ದರ್ಜೆಯ ಹುದ್ದೆಗಳ ನೇಮಕಾತಿಗೆಂದು 20,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಹಿಂದಿ ಭಾಷಿಕರನ್ನು ಎಲ್ಲ ಹುದ್ದೆಗಳಿಗೆ ತುಂಬುವ ಹುನ್ನಾರ. ಯಾಕೆಂದರೆ ಹಿಂದಿಯೇತರ ನುಡಿಗಳನ್ನು ಆಡುವ ಜನರಿಗೆ ತಮ್ಮ ತಾಯ್ನುಡಿಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ, ಇದು ಕನ್ನಡಿಗರಿಗೆ ಎಸಗಿದ ದ್ರೋಹ ಎಂದು ಅವರು ಕಿಡಿಕಾರಿದ್ದಾರೆ.
ಹೋರಾಟದ ಮೊದಲ ಹಂತವಾಗಿ ಇಂದು ಟ್ವಿಟರ್ ಅಭಿಯಾನ ನಡೆಸುತ್ತಿದ್ದು, ಸೋಮವಾರದಿಂದ ಹಂತಹಂತವಾಗಿ ಬೀದಿಚಳವಳಿ ನಡೆಸಲಾಗುವುದು. ರಾಜ್ಯದ ಎಲ್ಲ ಸಂಸದರು ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಇಲ್ಲವಾದಲ್ಲಿ ಅವರೂ ಸಹ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ದಕ್ಷಿಣದ ಚಿತ್ರಗಳಿಗೆ ಡಬ್ಬಿಂಗ್ ಮಾಡುವ 8 ಕಲಾವಿದರು