ಬೆಂಗಳೂರು : ರಾಜ್ಯ ಕಾಂಗ್ರೆಸ್ (Congress ) ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು (Cabinet Expansion ) ರಾಜ್ಯದ ಅಭಿವೃದ್ಧಿ ಅಥವಾ ಜನಹಿತದ ಉದ್ದೇಶದಿಂದ ನಡೆದಿಲ್ಲ. ಇದು ಸಂಪೂರ್ಣವಾಗಿ ಅಧಿಕಾರ ಹಂಚಿಕೆ, ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದ ಫಲವಾಗಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (Vijayendra ) ತೀವ್ರವಾಗಿ ಆರೋಪಿಸಿದ್ದಾರೆ.
“ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ” ಎಂಬ ತಮ್ಮ ಮಾತಿಗೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರ ಬಹಿರಂಗ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದು ವಿಜಯೇಂದ್ರ ಹೇಳಿದ್ದಾರೆ. ತನ್ವೀರ್ ಸೇಠ್, ಟಿ.ಬಿ. ಜಯಚಂದ್ರ, ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಹಲವು ನಾಯಕರ ಅಸಮಾಧಾನವು ಕಾಂಗ್ರೆಸ್ ಒಳಗಿನ ವಾಸ್ತವ ಸ್ಥಿತಿಯನ್ನು ಸಾರ್ವಜನಿಕವಾಗಿ ಬಯಲಿಗಳೆದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಮಹಿಳಾ ಸಬಲೀಕರಣದ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್, ಸಂಪುಟದಲ್ಲಿ ಒಬ್ಬ ಮಹಿಳೆಗೂ ಸ್ಥಾನ ನೀಡದಿರುವುದು ಅವರ ನೈಜ ಮನೋಭಾವವನ್ನು ತೋರಿಸುತ್ತದೆ. ಕೊನೆಯ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೈಬಿಟ್ಟಿರುವುದು ಇದಕ್ಕೆ ನಿದರ್ಶನ ಎಂದು ವಿಮರ್ಶಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಾರ್ಜ್ಶೀಟ್ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಹೈಕಮಾಂಡ್ ಭಯವೇ ಕಾರಣವೇ ಎಂದು ಪ್ರಶ್ನಿಸಿದರು. ಅಲ್ಲದೆ, ಸ್ಪೀಕರ್ ಮತ್ತು ಸಭಾಪತಿ ಹುದ್ದೆಗಳ ಕುರಿತು ಎಐಸಿಸಿ ಲೆಟರ್ಹೆಡ್ನಲ್ಲಿ ನಿರ್ದೇಶನ ನೀಡಿರುವುದು ವಿಧಾನಮಂಡಲದ ಸ್ವಾಯತ್ತತೆಗೆ ಎಸಗಿದ ದ್ರೋಹ ಎಂದಿದ್ದಾರೆ.
ನೇಮಕಾತಿ ವಿಚಾರದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಲಘುವಾಗಿ ಮಾತನಾಡಿರುವುದು ಸರ್ಕಾರದ ಅಹಂಕಾರವನ್ನು ಬಿಂಬಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ಗೆ ಜನತೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.
