Wednesday, May 7, 2025

ಸತ್ಯ | ನ್ಯಾಯ |ಧರ್ಮ

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿ – ಸಂಸದ ಶ್ರೇಯಸ್‌ ಪಟೇಲ್‌

ಹಾಸನ : ರೈತರನ್ನು ರೈತ ಸಂಪರ್ಕ ಕೇಂದ್ರಗಳಿಗೆ ಅಲೆಸದೆ ಕೃಷಿ ಚಟುವಟಿಕೆ ಗಳಿಗೆ ಅಗತ್ಯವಿರುವ ಉತ್ತಮ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕ ವಿತರಣೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರಗಳನ್ನು ಮಾರಾಟ ಮಾಡುವುದು ಹಾಗೂ ಕಳಪೆ ಗುಣಮಟ್ಟದ ಗೊಬ್ಬರ ಮಾರಾಟ ಮಾಡುವುದರ ಬಗ್ಗೆ ಗಮನಹರಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡುವಂತೆ ಸೂಚಿಸಿದರು.


ಗುಣಮಟ್ಟದ ಕೃಷಿ ಪರಿಕರಗಳನ್ನು ನೀಡಲು ಅಧಿಕಾರಿಗಳು ಎಚ್ಚರವಹಿಸುವಂತೆ ನಿರ್ದೇಶನ ನೀಡಿದರಲ್ಲದೆ, ಕಾಲಕಾಲಕ್ಕೆ ಸಬ್ಸಿಡಿ ದೊರೆಯುತ್ತದೆ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.
ಮುಂಗಾರಿಗೆ ಮುನ್ನ ತೆಂಗಿನ ಸಸಿಗಳನ್ನು ರೈತರಿಗೆ ನೀಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಗಿಡಗಳು ನಶಿಸಿ ಹೊಗದಂತೆ ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶ ಮತ್ತು ಜೈವಿಕ ತಂತ್ರಜ್ಞಾನ ಬಳಕೆಗೆ ರೈತರಿಗೆ ಅರಿವು ಮೂಡಿಸಲು ಸೂಚಿಸಿದರು.ಬೇಡಿಕೆಗೆ ಅನುಗುಣವಾಗಿ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕಿನ ರೈತರಿಗೆ ಮೆಣಸಿನ ಸಸಿಗಳನ್ನು ನೀಡುವಂತೆ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಹೊರಗಡೆಗೆ ಚೀಟಿ ಬರೆದು ಕೊಡುತ್ತಿದ್ದಾರೆ ಎಂದು ದೂರುಗಳು ಕೇಳಿ ಬಂದಿದ್ದು, ಈ ರೀತಿ ಮಾಡದೆ ರೋಗಿಗಳಿಗೆ ಆಸ್ಪತ್ರೆಯಲ್ಲಿರುವ ಔಷಧಿಗಳ ವಿತರಣೆಗೆ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಿರ್ದೇಶನ ನೀಡಿದರು.


ಆಸ್ಪತ್ರೆಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ ಕ್ರಮವಹಿಸಲು ಸೂಚನೆ ನೀಡಿದರು. ರಾತ್ರಿ ವೇಳೆಯಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸುತ್ತಿಲ್ಲ ಈ ನಿಟ್ಟಿನಲ್ಲಿ ಗಮನಹರಿಸಿ ಸಾರ್ವಜನಿಕರಿಗೆ ನೆರವಾಗುವಂತೆ ತಿಳಿಸಿದರಲ್ಲದೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ವೈದ್ಯರಿರುವಂತೆ ನೋಡಿಕೊಳ್ಳಿ ಎಂದು ಡಿ.ಹೆಚ್.ಓ. ಅವರಿಗೆ ಸೂಚನೆ ನೀಡಿದರು. ಅಂಬುಲೆನ್ಸ್ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದಾರೆ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಇ.ಸಿ.ಜಿ.ಕಡ್ಡಾಯವಾಗಿ ಮಾಡಬೇಕು ಎಂದು ಸುತ್ತೋಲೆ ಹೊರಡಿಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಸತ್ಯಭಾಮ ಸಿ, ಅವರು ಮಾತನಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯದ ಸಂದರ್ಭದಲ್ಲಿದ್ದು ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ನಾಮ ನಿರ್ದೇಶಿತ ಸದಸ್ಯರುಗಳಾದ ತಾರಾ ಚಂದನ್, ಮಂಜುಳಾ ಬಾಯಿ, ಎಲ್ ಡಿ.ಬಸವರಾಜು, ಶಿವಕುಮಾರ್, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page