Saturday, June 21, 2025

ಸತ್ಯ | ನ್ಯಾಯ |ಧರ್ಮ

ಅಶಾಂತಿ ಸೃಷ್ಟಿಸುವವರ ಮೇಲೆ ನಿರ್ದಾಕ್ಷಿಣ್ಯ ಕಠಿಣ ಕ್ರಮ ; ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ

ಸಮಾಜದ ಶಾಂತಿ ಸುವ್ಯವಸ್ಥೆ ಹಾಳಾಗದಂತೆ ಎಚ್ಚರಿಕೆ ವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವಿಭಾಗಗಳ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಸಚಿವರುಗಳನ್ನು ಒಳಗೊಂಡ ಸಭೆಯಲ್ಲಿ ಗೃಹ ಇಲಾಖೆಗೆ ಸಂಬಂಧಿಸಿದ ಪ್ರಮುಖ ಅಧಿಕಾರಿಗಳೊಂದಿಗೆ ಮಾತನಾಡಿ ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಜನ ಹೊಸ ಸರ್ಕಾರಕ್ಕೆ ಅವಕಾಶ ನೀಡಿದ್ದು, ಹಿಂದಿನ ಅವಧಿಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು. ಹಿಂದಿನ ಅವಧಿಯಂತೆ ಕೆಲಸ ಮಾಡುವುದು ಬಿಟ್ಟು, ಜನರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಕೆಲಸ ನಿರ್ವಹಿಸುವುದು ನಿಮ್ಮ ಜವಾಬ್ದಾರಿ. ಅದರಂತೆ, ಸಮಾಜದ ಶಾಂತಿ ಸುವ್ಯವಸ್ಥೆ ಹಾಳುಗೆಡವಲು ಯಾರೇ ಪ್ರಯತ್ನಿಸಿದರೂ ನಿರ್ದಾಕ್ಷಿಣ್ಯವಾಗಿ ಅವರ ಮೇಲೆ ಕ್ರಮ ಜರುಗಿಸಬೇಕೆಂದು ತಿಳಿಸಿದ್ದಾರೆ.

ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲೂ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕೆಲವು ಅಗತ್ಯ ಸೂಕ್ಷ್ಮ ಸ್ಥಳಗಳಲ್ಲಿ ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಸಂಚಾರ ದಟ್ಟಣೆ ನಿವಾರಣೆಗೆ ಏನೇನು ಅಗತ್ಯ ಸಲಹೆಗಳನ್ನು ಅಧಿಕಾರಿಗಳಿಂದ ಪಡೆದರು.

ಇನ್ನು ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page