Monday, June 30, 2025

ಸತ್ಯ | ನ್ಯಾಯ |ಧರ್ಮ

ಕೇಂದ್ರದ ವಿರುದ್ಧ ಪ್ರತಿಭಟನೆಗೆ ಬೆಂಬಲ ನೀಡಿ: ಬಿಜೆಪಿ ಸಂಸದರಿಗೆ ಸಿಎಂ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ನಡೆಸಲಿರುವ ಹೋರಾಟಕ್ಕೆ ಪಕ್ಷಭೇದ ಮರೆತು ಬೆಂಬಲಿಸಬೇಕು ಎಂದು ವಿನಂತಿಸಿ ಬಿಜೆಪಿ ಮತ್ತು ಜೆಡಿಎಸ್ ಸಂಸದರಿಗೆ ಹಾಗೂ ರಾಜ್ಯಸಭಾ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.


ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಬುಧವಾರ ನಡೆಯುವ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ, ಅನಂತ್ ಕುಮಾರ್ ಹೆಗಡೆ, ನಳಿನ್‌ ಕುಮಾರ್‌ ಕಟೀಲ್‌, ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಹೆಚ್ ಡಿ ದೇವೇಗೌಡ, ಭಗವಂತ ಖೂಬಾ ಸಹಿತ ಹಲವು ಸಂಸದರಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.


ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ.


ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಸಂಕಷ್ಟವನ್ನು ಉಂಟು ಮಾಡಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಈ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page