ದೆಹಲಿ: ಪ್ರಕೃತಿಯನ್ನು ಅತಿಯಾಗಿ ಹಾಳು ಮಾಡುತ್ತಿರುವುದರಿಂದಲೇ ಇಂತಹ ದುರಂತಗಳು ಸಂಭವಿಸುತ್ತಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉಂಟಾದ ಪ್ರವಾಹದ ಕುರಿತು ಪರಿಸರ ಕಾರ್ಯಕರ್ತೆ ಅನಾಮಿಕಾ ರಾಣಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.
ಈ ಸಂದರ್ಭದಲ್ಲಿ, ಅಕ್ರಮವಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ನ್ಯಾಯಾಲಯ ತೀವ್ರ ಕಳವಳ ವ್ಯಕ್ತಪಡಿಸಿತು. ಪ್ರವಾಹದ ನೀರಿನಲ್ಲಿ ದೊಡ್ಡ ಸಂಖ್ಯೆಯ ಮರದ ದಿಮ್ಮಿಗಳು ತೇಲಿ ಹೋಗುತ್ತಿರುವುದನ್ನು ತಾವು ಸುದ್ದಿ ವರದಿಗಳಲ್ಲಿ ಗಮನಿಸಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ತಿಳಿಸಿದರು.
ಇದು ಬಹಳ ಗಂಭೀರ ವಿಷಯ ಎಂದ ಅವರು, ಅಭಿವೃದ್ಧಿ ಮತ್ತು ಪರಿಸರವನ್ನು ಸಮತೋಲನದಲ್ಲಿ ಕೊಂಡೊಯ್ಯುವ ಅಗತ್ಯವಿದೆ ಎಂದು ತಿಳಿಸಿದರು.
ನ್ಯಾಯಾಲಯವು ಕೇಂದ್ರ ಸರ್ಕಾರ, ಪರಿಸರ ಸಚಿವಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.