ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂಬ ಎನ್ಜಿಒ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿ ಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ.
ಈ ಪ್ರಕರಣವು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ನಡೆದಿದೆ ಎನ್ನಲಾದ ಭೂ ಅತಿಕ್ರಮಣಕ್ಕೆ ಸಂಬಂಧಿಸಿದ್ದು, ‘ಸಮಾಜ ಪರಿವರ್ತನಾ ಸಮುದಾಯ’ ಎಂಬ ಎನ್ಜಿಒ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ತುರ್ತು ವಿಚಾರಣೆಗೆ ಕೋರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ಪೀಠವು ಈ ಮನವಿಯನ್ನು ನಿರಾಕರಿಸಿ, ಪ್ರಕರಣವನ್ನು ಸಾಮಾನ್ಯ ಪ್ರಕ್ರಿಯೆಯಂತೆ ಪಟ್ಟಿ ಮಾಡಲು ಆದೇಶಿಸಿದೆ.
ಕಳೆದ 2025ರ ಜುಲೈನಲ್ಲಿ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಲೋಕಾಯುಕ್ತ ತನಿಖೆ ಈಗಾಗಲೇ ಮುಕ್ತಾಯವಾಗಿರುವಾಗ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಮುಂದುವರಿಸುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಈ ಹಿಂದೆ ಪ್ರಶ್ನಿಸಿತ್ತು. ಸದ್ಯ ಈ ತಡೆಯಾಜ್ಞೆ ಮುಂದುವರಿದಿದ್ದು, ಕುಮಾರಸ್ವಾಮಿ ಅವರಿಗೆ ಸದ್ಯಕ್ಕೆ ಕಾನೂನು ಸಂಕಷ್ಟದಿಂದ ಸಮಾಧಾನ ಸಿಕ್ಕಂತಾಗಿದೆ.
