ಹೊಸದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನಿರಾಸೆಯಾಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಈ ಆದೇಶದಲ್ಲಿ ಪ್ರಕರಣದ ತನಿಖೆಯನ್ನು 6-8 ತಿಂಗಳೊಳಗೆ ಪೂರ್ಣಗೊಳಿಸಲು ಆದೇಶಿಸಲಾಗಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ಈ ಕುರಿತು ಆದೇಶ ನೀಡಿದೆ. ಸಿಬಿಐ ಮತ್ತು ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಹಾಜರಿದ್ದರು. ಮನೀಶ್ ಸಿಸೋಡಿಯಾ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.
ದೆಹಲಿಯ ಮದ್ಯ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಈ ತಿಂಗಳ ಆರಂಭದಲ್ಲಿ ಕಾಯ್ದಿರಿಸಿತ್ತು. ಸಿಬಿಐ ಮತ್ತು ಇಡಿ ದಾಖಲಿಸಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿಯ ವಾದಗಳು ಅಕ್ಟೋಬರ್ 17ರಂದು ಮುಕ್ತಾಯಗೊಂಡವು. ಅಂದು ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಕಾಲ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.ಇದೇ ವೇಳೆ ತನಿಖೆಗೆ ಎಷ್ಟು ಸಮಯ ಬೇಕು ಎಂದು ತನಿಖಾ ಸಂಸ್ಥೆಗಳನ್ನು ಪ್ರಶ್ನಿಸಿತ್ತು.
ಈ ವರ್ಷದ ಫೆಬ್ರವರಿಯಲ್ಲಿ ಮದ್ಯದ ಹಗರಣದಲ್ಲಿ ಬಂಧಿತರಾಗಿದ್ದ ಸಿಸೋಡಿಯಾ ಅಂದಿನಿಂದ ಜೈಲಿನಲ್ಲಿದ್ದರು. ಬಂಧನದ ವೇಳೆ ಸಿಸೋಡಿಯಾ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಫೆ.28ರಂದು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.