ದೆಹಲಿ: ಆಸ್ತಿ ಧ್ವಂಸ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕಳೆದ ತಿಂಗಳು ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪದ ಮೇಲೆ ಸಿಂಧುದುರ್ಗ ಜಿಲ್ಲೆಯಲ್ಲಿ ಮನೆ ಮತ್ತು ಅಂಗಡಿಯನ್ನು ಕೆಡವಲಾಗಿತ್ತು.
ಕಳೆದ ವರ್ಷ ನವೆಂಬರ್ 13ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸಿ ಕ್ಷುಲ್ಲಕ ದೂರಿನ ಆಧಾರದ ಮೇಲೆ ಅಧಿಕಾರಿಗಳು ಮನೆ ಮತ್ತು ಅಂಗಡಿಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಹೇಳಿಕೊಂಡಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟಸ್ ಜಾರ್ಜ್ ಮಸೀಹ್ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳ ನಂತರ ಅರ್ಜಿಯ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನೀಡಲಾದ ತೀರ್ಪಿನಲ್ಲಿ ಕೋರ್ಟ್ ಆಸ್ತಿ ಧ್ವಂಸಕ್ಕೆ ರಾಷ್ಟ್ರವ್ಯಾಪಿ ಮಾರ್ಗಸೂಚಿಗಳನ್ನು ನಿಗದಿಪಡಿಸಿತ್ತು. ಕಾರಣ ಕೇಳಿ ನೋಟಿಸ್ ನೀಡದೆ ಆಸ್ತಿಗಳನ್ನು ಕೆಡವುವುದನ್ನು ಅದು ನಿಷೇಧಿಸಿತ್ತು.
ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.