ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿ, ಅರ್ಜಿದಾರರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ತರಾಟೆ ತೆಗೆದುಕೊಂಡಿದೆ.
ಹೌದು, ಇಂದು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಎಸ್ ಕೆ ಕೌಲ್ ಮತ್ತು ಅಭಯ್ ಎಸ್ ಓಕಾ ನೇತೃತ್ವದ ಪೀಠವು, ಹಸುವು ರಾಷ್ಟ್ರೀಯ ಪ್ರಾಣಿ ಆಗದೆ ಇರುವುದು ಯಾರ ಮತ್ತು ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸುವುದು ನ್ಯಾಯಾಲಯದ ಕೆಲಸವೇ? ನೀವು ಏಕೆ ಇಂತಹ ಅರ್ಜಿಗಳನ್ನು ಸಲ್ಲಿಸುತ್ತೀರಿ? ನೀವು ನ್ಯಾಯಾಲಯಕ್ಕೆ ಬಂದ ಕಾರಣ ನಾವು ಕಾನೂನನ್ನು ಗಾಳಿಗೆ ತೂರಬೇಕೇ? ಎಂಬ ಸಾಲು ಸಾಲು ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಕೇಳಿದೆ.
ಗೋವಂಶ್ ಸೇವಾ ಸದನ್ ಮತ್ತು ಇತರರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ತರಾಟೆಯ ನಂತರ ಅರ್ಜಿಯನ್ನು ಹಿಂಪಡೆದಿದ್ದಾರೆ.