2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಅವರು, ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸಿತು. ಮರುಪರಿಶೀಲನಾ ಅರ್ಜಿ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಪೀಠವು, ಈ ಪ್ರಕರಣದಲ್ಲಿ ಯಾವುದೇ ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.
ಜೊತೆಗೆ, ಅರ್ಜಿಯ ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ (ಮೌಖಿಕ ವಿಚಾರಣೆ) ನಡೆಸಬೇಕೆಂಬ ಉಮರ್ ಖಾಲಿದ್ ಅವರ ಮನವಿಯನ್ನೂ ನ್ಯಾಯಪೀಠವು ತಿರಸ್ಕರಿಸಿದೆ.
