Home ಇನ್ನಷ್ಟು ಕೋರ್ಟು - ಕಾನೂನು ನ್ಯಾಯಮೂರ್ತಿ ಯಶ್ವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಶಾಕ್: ಅರ್ಜಿ ತಿರಸ್ಕೃತ!

ನ್ಯಾಯಮೂರ್ತಿ ಯಶ್ವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಶಾಕ್: ಅರ್ಜಿ ತಿರಸ್ಕೃತ!

0

ದೆಹಲಿ: ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರಿಗೆ ಸರ್ವೋಚ್ಚ ನ್ಯಾಯಾಲಯವು ದೊಡ್ಡ ಆಘಾತ ನೀಡಿದೆ. ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತ್ರಿ ಸದಸ್ಯ ವಿಚಾರಣಾ ಸಮಿತಿಯ ತನಿಖಾ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ಯಶ್ವಂತ್ ವರ್ಮಾ ಈ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ನೋಟುಗಳ ಕಂತೆಗಳು ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಆಂತರಿಕ ವಿಚಾರಣೆಗಾಗಿ ಮೂವರು ಹೈಕೋರ್ಟ್ ನ್ಯಾಯಾಧೀಶರನ್ನೊಳಗೊಂಡ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು. ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ನೋಟುಗಳ ಕಂತೆಗಳು ಪತ್ತೆಯಾಗಿರುವುದು ನಿಜ ಎಂದು ತ್ರಿ ಸದಸ್ಯ ಸಮಿತಿ ತೀರ್ಮಾನಿಸಿ, ಈ ಕುರಿತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿತ್ತು. ಆದರೆ, ಸಮಿತಿಯ ತನಿಖಾ ವರದಿಯನ್ನು ವರ್ಮಾ ಪ್ರಶ್ನಿಸಿದ್ದರು.

ನ್ಯಾಯಮೂರ್ತಿ ವರ್ಮಾ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸಾರ್ಹತೆಯನ್ನು ಮೂಡಿಸುವುದಿಲ್ಲ ಮತ್ತು ಅವರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬಾರದು ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ ಅಂದಿನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದ ಪತ್ರವು ಸಂವಿಧಾನ ವಿರೋಧಿಯಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಒಪ್ಪಿಕೊಂಡಿದೆ.

ಈ ವರ್ಷ ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಬಂದಾಗ, ದೊಡ್ಡ ಪ್ರಮಾಣದಲ್ಲಿ ಸುಟ್ಟುಹೋದ ನೋಟುಗಳ ಕಂತೆಗಳು ಮತ್ತು ಅರ್ಧ ಸುಟ್ಟ ನೋಟುಗಳು ಪತ್ತೆಯಾಗಿದ್ದವು. ಈ ಘಟನೆಯ ನಂತರ, ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಅಲ್ಲದೆ, ಆಂತರಿಕ ತನಿಖೆಗೂ ಆದೇಶಿಸಿತ್ತು.

ತನಿಖೆಗಾಗಿ ರಚಿಸಲಾದ ಸಮಿತಿಯು, ನೋಟುಗಳ ಕಂತೆಗಳು ಸ್ಟೋರ್ ರೂಂನಲ್ಲಿ ಇದ್ದವು ಮತ್ತು ಅದು ನ್ಯಾಯಮೂರ್ತಿಗಳ ನಿವಾಸದ ಭಾಗವೇ ಎಂದು ದೃಢಪಡಿಸಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಮಿತಿಯು ವರ್ಗಾವಣೆಯನ್ನು ಮೀರಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿಫಾರಸು ಮಾಡಿತ್ತು. ತ್ರಿ ಸದಸ್ಯ ಸಮಿತಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

You cannot copy content of this page

Exit mobile version