Home ದೇಶ ವಿಜಯ್‌ ಸೋಲಿನ ವದಂತಿ: ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ವಿಜಯ್‌ ಸೋಲಿನ ವದಂತಿ: ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

0

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನ ಕೃಷ್ಣಗಿರಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಟಿವಿಕೆ (TVK) ಪಕ್ಷದ ಅಧ್ಯಕ್ಷ ಮತ್ತು ನಟ ವಿಜಯ್ ಅವರು ಚುನಾವಣೆಯಲ್ಲಿ ಸೋಲಲಿದ್ದಾರೆ ಎಂಬ ವದಂತಿಗಳು ಹರಡಿದ ಬೆನ್ನಲ್ಲೇ, ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕೃಷ್ಣಗಿರಿಯ ಕೆ. ಮಹೇಂದ್ರನ್ (28) ಎಂಬುವವರು ವಿಜಯ್ ಮತ್ತು ಟಿವಿಕೆ ಪಕ್ಷದ ಕಟ್ಟಾ ಅಭಿಮಾನಿಯಾಗಿದ್ದಾರೆ. ಮತ ಎಣಿಕೆ ಆರಂಭವಾಗುವ ಮುನ್ನವೇ ವಿಜಯ್ ಅವರು ಸೋಲಬಹುದು ಎಂಬ ವದಂತಿಗಳನ್ನು ಕೇಳಿ ಮನನೊಂದ ಮಹೇಂದ್ರನ್, ತಮ್ಮ ಮನೆಯ ಸಮೀಪವೇ ಗಂಟಲು ಕುಯ್ದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅವರನ್ನು ರಕ್ಷಿಸಿ, ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಮಹೇಂದ್ರನ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೃಷ್ಣಗಿರಿ ಟೌನ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You cannot copy content of this page

Exit mobile version