ಕರ್ನಾಟಕದ ಮೇಕೆದಾಟು ಡಿಪಿಆರ್ ತಿರಸ್ಕರಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ತುರ್ತು ಪತ್ರ

ಚೆನ್ನೈ: ತಮಿಳುನಾಡಿನ ಮನವಿಯನ್ನು ಪರಿಗಣಿಸದೆ, ಮೇಕೆದಾಟು ಯೋಜನೆಗೆ ಸಂಬಂಧಿಸಿದ ಕರ್ನಾಟಕದ ಪ್ರಸ್ತಾವನೆಯನ್ನು ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗ (CWC) ಪರಿಗಣಿಸುತ್ತಿರುವುದಕ್ಕೆ ತಮಿಳುನಾಡು ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಗಳವಾರದಂದು ತೀವ್ರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಾವೇರಿ ಜಲವಿವಾದ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿರುವ ಕಾರಣ, ಕರ್ನಾಟಕ ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿಯನ್ನು (DPR) ತಿರಸ್ಕರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ಇದರೊಂದಿಗೆ, ಕಾವೇರಿ ಕೊಳ್ಳದ ಇತರ ರಾಜ್ಯಗಳ (Co-basin states) ಒಪ್ಪಿಗೆಯಿಲ್ಲದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದೂ ಅವರು ಪ್ರಧಾನಿಯವರನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೇ 27 ರಂದು ತಮ್ಮ ಮೊದಲ ಅಧಿಕೃತ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ವಿಜಯ್, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಗೂ ಮುನ್ನ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ, ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ‘ಭೂಮಿ ಪೂಜೆ’ ನೆರವೇರಿಸುವ ಕುರಿತಾದ ಪ್ರಕಟಣೆ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳು ತಮ್ಮ ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ತೀವ್ರ ಕಳವಳ ಮೂಡಿಸಿದೆ ಎಂದು ವಿಜಯ್ ಉಲ್ಲೇಖಿಸಿದ್ದಾರೆ.

ಕಾವೇರಿ ನೀರಿನ ಸೂಕ್ಷ್ಮ ವಿವಾದಕ್ಕೆ ಸುಮಾರು ಮೂರು ದಶಕಗಳ ಸುದೀರ್ಘ ಕಾನೂನು ಹೋರಾಟದ ನಂತರ 2018 ರ ಫೆಬ್ರವರಿ 16 ರಂದು ಸುಪ್ರೀಂಕೋರ್ಟ್‌ನಿಂದ ಅಂತಿಮ ತೀರ್ಪು ಸಿಕ್ಕಿದ್ದು, ಪ್ರಸ್ತುತ ಅದು ಜಾರಿಯಲ್ಲಿದೆ ಎಂಬುದನ್ನು ಅವರು ಪತ್ರದಲ್ಲಿ ನೆನಪಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು