ಕೇರಳ ರಾಜ್ಯದ ವಯನಾಡಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ 25 ಮೀಟರ್ ಆಳದ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ತೋಟದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ತಲಪ್ಪುಜಾದ ಕನ್ನಾಟ್ ಹಿಲ್ನಲ್ಲಿ ಅಪಘಾತಕ್ಕೀಡಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮೃತರೆಲ್ಲರೂ ವಯನಾಡು ಮೂಲದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಎನ್ನುವುದಾಗಿ ವರದಿಯಾಗಿದೆ. ಅಪಘಾತದ ವೇಳೆ ಜೀಪಿನಲ್ಲಿ ಚಾಲಕ ಸೇರಿ ಒಟ್ಟು 13 ಮಂದಿ ಇದ್ದರು. ಗಾಯಾಳುಗಳನ್ನು ವಯನಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆಯನ್ನು ಜಿಲ್ಲಾ ವೈದ್ಯಾಧಿಕಾರಿ ದೃಢಪಡಿಸಿದ್ದಾರೆ. ಅಪಘಾತದಲ್ಲಿ ಜೀಪು ನಜ್ಜುಗುಜ್ಜಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಈ ದುರಂತದ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಆಘಾತ ವ್ಯಕ್ತಪಡಿಸಿ ಅರಣ್ಯ ಸಚಿವ ಎ.ಕೆ.ಶಶೀಂದ್ರನ್ಗೆ ಸ್ಥಳಕ್ಕೆ ತೆರಳುವಂತೆ ಆದೇಶಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂಒ ತಿಳಿಸಿದ್ದಾರೆ. ಮತ್ತೊಂದೆಡೆ, ಈ ಘಟನೆಗೆ ವಯನಾಡ್ ಸಂಸದ ರಾಹುಲ್ ಗಾಂಧಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ಮಾತನಾಡಿ ಶೀಘ್ರ ಸ್ಪಂದಿಸುವಂತೆ ಕೋರಲಾಗಿದೆ ಎಂದರು. ಮೃತರ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಹುಲ್, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.