ಬೆಂಗಳೂರು: ಬರ ಅಧ್ಯಯನದ ನೆಪದಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ನಾಯಕರು, ಈ ಕುರಿತು ಸದನದಲ್ಲಿ ಚರ್ಚಿಸದೆ ಕೇವಲ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಮುಖ್ಯಮಂತ್ರಿ ಅಥವಾ ತಮ್ಮ ಬಳಿ ಯಾವುದೇ ವರದಿ ಹಾಗೂ ಸಲಹಾ ಪತ್ರವನ್ನು ನೀಡಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ವಿಪಕ್ಷ ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿದೆ ಎಂದು ಪರಮೇಶ್ವರ್ ಆರೋಪಿಸಿದರು. ನಾಗೇಂದ್ರ ಅವರ ರಾಜೀನಾಮೆ ಹಾಗೂ ಸಚಿವ ಸಂಪುಟ ಪುನರ್ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
