ರಾಜೀನಾಮೆ ಕುರಿತು ಕೇಂದ್ರ ಸರ್ಕಾರ ತನ್ನ ಅಂತಿಮ ನಿಲುವನ್ನು ತಕ್ಷಣವೇ ಸ್ಪಷ್ಟಪಡಿಸಬೇಕು – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ (Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆ ಕುರಿತು ಕೇಂದ್ರ ಸರ್ಕಾರ ತನ್ನ ಅಂತಿಮ ನಿಲುವನ್ನು ತಕ್ಷಣವೇ ಸ್ಪಷ್ಟಪಡಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಶನಿವಾರ ಆಗ್ರಹಿಸಿದೆ.

ಸಚಿವರ ರಾಜೀನಾಮೆ ವಿಚಾರದಲ್ಲಿ ಸರ್ಕಾರ ‘ಹೌದು’ ಅಥವಾ ‘ಇಲ್ಲ’ ಎಂಬ ಸ್ಪಷ್ಟ ಉತ್ತರ ನೀಡಬೇಕು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಕಠಿಣ ಹೋರಾಟ ರೂಪಿಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, ಕಳೆದ ಶುಕ್ರವಾರ ತಮ್ಮ ಸಂಘಟನೆಯ ಪ್ರತಿನಿಧಿಗಳು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು. ಈ ಸಭೆಯಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಹಾಗೂ ಕಾನೂನಾತ್ಮಕ ಬೆಂಬಲ ನೀಡುವ ವಿಷಯಗಳಿಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದ್ದು, ತತ್ವಶಃ ಒಪ್ಪಿಗೆ ನೀಡಿದೆ. ಆದರೆ, ಪ್ರಮುಖ ಬೇಡಿಕೆಯಾಗಿರುವ ಶಿಕ್ಷಣ ಸಚಿವರ ರಾಜೀನಾಮೆ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಖಚಿತ ನಿರ್ಧಾರವನ್ನು ತಿಳಿಸಿಲ್ಲ.

ಇತ್ತೀಚೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸುಧಾರಣೆಯ ಭಾಗವಾಗಿ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕ್ರಮ ಕೈಗೊಂಡಿದೆ. ಆದರೆ ಕೇವಲ ಅಧಿಕಾರಿಗಳ ವಜಾದಿಂದ ಹೊಣೆಗಾರಿಕೆ ಮುಗಿಯುವುದಿಲ್ಲ. ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲಾದ ಅನ್ಯಾಯಕ್ಕೆ ಶಿಕ್ಷಣ ಸಚಿವರೇ ನೇರ ಹೊಣೆಗಾರರಾಗಿದ್ದು, ಅವರು ಹುದ್ದೆಗೆ ರಾಜೀನಾಮೆ ನೀಡಲೇಬೇಕು ಎಂದು ರಾಂಕಾ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರವು ತನ್ನ ನಿಲುವನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ ನಂತರವೇ ಸಿಜೆಪಿ ತನ್ನ ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲಿದೆ.

Related Articles

ಇತ್ತೀಚಿನ ಸುದ್ದಿಗಳು