ಹಾಸನ: ಗಣರಾಜ್ಯೋತ್ಸವವು ಭಾರತದ ರಾಷ್ಟ್ರೀಯ ಹಬ್ಬವಾಗಿದ್ದು, ದೇಶದ ಸಂವಿಧಾನಾತ್ಮಕ ಮೌಲ್ಯಗಳು, ಪ್ರಜಾಪ್ರಭುತ್ವದ ಶಕ್ತಿ ಹಾಗೂ ಏಕತೆಯನ್ನು ಪ್ರತಿಬಿಂಬಿಸುವ ಮಹತ್ವದ ದಿನವಾಗಿದೆ ಎಂದು ಹಾಸನ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಟಿ. ದ್ಯಾವೇಗೌಡ ಅವರು ತಿಳಿಸಿದರು.
ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಇಂದು ಆಯೋಜಿಸಿದ್ದ ಭಾರತದ 77ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವಾಗಿದ್ದು, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಹಾಗೂ ಪತ್ರಿಕಾರಂಗ ಸೇರಿ ಪ್ರಜಾಪ್ರಭುತ್ವ ವ್ಯವಸ್ಥೆಯ ಎಲ್ಲಾ ಅಂಶಗಳನ್ನು ಸಮರ್ಪಕವಾಗಿ ಒಳಗೊಂಡಿದೆ. ಜನವರಿ 26,ರ 1950ರಂದು ಭಾರತವು ಗಣರಾಜ್ಯವಾಗಿ ಘೋಷಿತಗೊಂಡು, ಸ್ವತಂತ್ರ ರಾಷ್ಟ್ರವಾಗಿ ಹೊಸ ಐತಿಹಾಸಿಕ ಯುಗಕ್ಕೆ ಕಾಲಿಟ್ಟ ದಿನವೇ ಗಣರಾಜ್ಯೋತ್ಸವ. ಈ ದಿನವನ್ನು ದೇಶದಾದ್ಯಂತ ಹಬ್ಬದಂತೆ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವವು ಶಾಂತಿ, ಶಕ್ತಿ, ಏಕತೆ ಹಾಗೂ ಧೈರ್ಯದ ಸಂಕೇತವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ಪವಿತ್ರ ದಿನವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿ, ಮತ, ಭಾಷೆ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರಿಗೂ ಸಮಾನತೆ ನೀಡುವ ಸಂವಿಧಾನ ನಮ್ಮದಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಹಾಗೂ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದ್ದು, ಅದನ್ನು ಸಂರಕ್ಷಿಸಲು ಕಾನೂನುಬದ್ಧ ಆಡಳಿತ ವ್ಯವಸ್ಥೆಯಾಗಿ ಸಂವಿಧಾನವನ್ನು ಜಾರಿಗೆ ತರಲಾಯಿತು ಎಂದರು.
